ಹೊಸದಿಗಂತ ಡಿಜಿಟಲ್ ಡೆಸ್ಕ್:
ತಡರಾತ್ರಿ ಹಾಸನದ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾದ ಬಳಿಕ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಘಟನೆ ನಡೆದಿದ್ದು ತುಂಬಾ ದುರಾದೃಷ್ಟಕರ. ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಉಸ್ತುವಾರಿ ಸಚಿವರು ಕುಂಭಮೇಳ ಸಮಾರೋಪ ಮುಗಿಸಿ ಹಾಸನಕ್ಕೆ ತೆರಳಿ ಪರಿಸ್ಥಿತಿ ನಿರ್ವಹಣೆ ಮಾಡಲಿದ್ದಾರೆ ಎಂದರು.
ಭೀಕರ ಅಪಘಾತಕ್ಕೆ ಕಾರಣವಾದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಚಾಲಕ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಲಿನ ಟ್ಯಾಂಕರ್ ಚಲಾಯಿಸುತ್ತಿದ್ದ ಈತ ರಸ್ತೆ ನಿಯಮವನ್ನು ಉಲ್ಲಂಘಿಸಿ ಎಡಬದಿಯಿಂದ ಬಂದಿದ್ದೇ ಭೀಕರ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿಯಲ್ಲಿರುವ ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60) ಹಾಗೂ ಭಾರತಿ (50) ಎಂದು ಗುರುತಿಸಲಾಗಿದೆ.