ಹೊಸದಿಗಂತ ವರದಿ ತುಮಕೂರು:
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿ ಗ್ರಾಮದ ಸಸ್ಯ ಕ್ಷೇತ್ರದ ಬಳಿ ಭೀಕರ ಅಪಘಾತ ಸಂಭವಿಸಿದ್ದು ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ತೆರಳುತ್ತಿದ್ದ ಮತ್ತೊಂದು ಕಾರಿಗೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ಸುಮಾರು 7.45ರ ವೇಳೆಗೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಇದನ್ನೂ ಓದಿ:
ಚಿಕ್ಕನಾಯಕನಹಳ್ಳಿ ಕಡೆಯಿಂದ ತೆರಳುತ್ತಿದ್ದ ವಾಹನದಲ್ಲಿ ನಾಲ್ವರು, ತುರುವೇಕೆರೆ ಕಡೆಯಿಂದ ಬರುತ್ತಿದ್ದ ವಾಹನದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳದಿಂದ ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಯಾವುದೇ ವಿದ್ಯುತ್ ದೀಪಗಳ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದ್ದು, ರಾತ್ರಿ ವೇಳೆ ಕತ್ತಲಿನ ಪರಿಸ್ಥಿತಿಯೂ ರಕ್ಷಣಾ ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿದೆ.
ಘಟನೆಯ ಸ್ಥಳಕ್ಕೆ ಪೊಲೀಸ್ ಹಾಗೂ ಸ್ಥಳೀಯರು ಆಗಮಿಸಿ ರಕ್ಷಣಾ ಕಾರ್ಯ ಮಾಡಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದು ಬರಬೇಕಿದೆ.



