July 5, 2026
Sunday, July 5, 2026
spot_img

ತಮಿಳುನಾಡಿನಲ್ಲಿ ಹಾರ್ಸ್-ಟ್ರೇಡಿಂಗ್ ಆರೋಪ: ಸಿಎಂ ವಿಜಯ್ ವಿರುದ್ಧ ವಿರೋಧ ಪಕ್ಷಗಳ ಜಂಟಿ ತಂತ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಮಿಳುನಾಡಿನ ಆಡಳಿತಾರೂಢ ಟಿವಿಕೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿವೆ. ಶಾಸಕರ ಕುದುರೆ ವ್ಯಾಪಾರ, ಸರ್ಕಾರಿ ಇಲಾಖೆಗಳನ್ನು ದುರುಪಯೋಗ ಮತ್ತು ಸಚಿವ ಸಂಪುಟ ಸಭೆಗಳಲ್ಲಿ ಅನಧಿಕೃತ ವ್ಯಕ್ತಿಗಳ ಭಾಗವಹಿಸುವಿಕೆ ಕುರಿತು ಮಧ್ಯಪ್ರವೇಶಿಸುವಂತೆ ಕೋರಿ ಮೂರೂ ಪಕ್ಷಗಳ ನಾಯಕರು ಶನಿವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್‌ನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ದೂರು ನೀಡಿದ್ದಾರೆ.

ಡಿಎಂಕೆ ನೀಡಿದ ದೂರು ಮತ್ತು ಗಂಭೀರ ಆರೋಪಗಳು

ಡಿಎಂಕೆ ಸಾಂಘಿಕ ಕಾರ್ಯದರ್ಶಿ ಆರ್.ಎಸ್. ಭಾರತಿ ನೇತೃತ್ವದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದೆ. ವಿರೋಧ ಪಕ್ಷದ ಜನಪ್ರತಿನಿಧಿಗಳನ್ನು ಬಲವಂತವಾಗಿ ಪಕ್ಷಾಂತರ ಮಾಡಲು ಕಾನೂನುಬಾಹಿರ ಬಂಧನ, ಪೊಲೀಸ್ ದಬ್ಬಾಳಿಕೆ ಮತ್ತು ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.

ಜಾನ್ ಮತ್ತು ವಿಷ್ಣು ರೆಡ್ಡಿ ಎಂಬ ಇಬ್ಬರು ಖಾಸಗಿ ವ್ಯಕ್ತಿಗಳು ಸಚಿವರಿಗಿಂತ ಹೆಚ್ಚು ಅಧಿಕಾರ ಚಲಾಯಿಸುತ್ತಿದ್ದಾರೆ. ಇವರು ಸರ್ಕಾರದ ಉನ್ನತ ಮಟ್ಟದ ಸಭೆಗಳಲ್ಲಿ ಭಾಗವಹಿಸಿ ಅಧಿಕಾರಿಗಳಿಗೆ ಆದೇಶ ನೀಡುತ್ತಿದ್ದಾರೆ ಎಂದು ಆರ್.ಎಸ್. ಭಾರತಿ ದೂರಿದ್ದಾರೆ. ಮುಖ್ಯಮಂತ್ರಿ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಿರುಚೆಂದೂರು ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್‌ರನ್ನು ಬಂಧಿಸಿರುವುದು ರಾಜಕೀಯ ದುರುಪಯೋಗಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಸಿಎಂ ವಿಜಯ್ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ:

ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಹೇಳಿಕೆಯನ್ನು ಆಧರಿಸಿ ಡಿಎಂಕೆ ಈ ಹಿಂದೆ ರಾಜ್ಯಪಾಲರನ್ನು ಸಂಪರ್ಕಿಸಿತ್ತು. ಇಬ್ಬರು ಡಿಎಂಕೆ ಶಾಸಕರು ರಾಜೀನಾಮೆ ನೀಡಿದರೆ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆರ್ಥಿಕ ಸಹಾಯ ಮಾಡುವುದಾಗಿ ಮುಖ್ಯಮಂತ್ರಿ ವಿಜಯ್ ವೈಯಕ್ತಿಕವಾಗಿ ಆಮಿಷ ಒಡ್ಡಿದ್ದಾರೆ ಎಂದು ವೈಕೋ ಆರೋಪಿಸಿದ್ದರು. ಇದರ ಆಧಾರದ ಮೇಲೆ ವಿಜಯ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ಡಿಎಂಕೆ ಕೋರಿದೆ.

ಎಐಎಡಿಎಂಕೆ ಮತ್ತು ಬಿಜೆಪಿ ನೀಡಿದ ದೂರುಗಳು

ಶಾಸಕರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಿ ಕೃತಕ ಉಪಚುನಾವಣೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿರುವ ಎಐಎಡಿಎಂಕೆ, ಸಂವಿಧಾನದ 167ನೇ ವಿಧಿಯಡಿ ಸರ್ಕಾರದ ಬಳಿ ವಿವರಣೆ ಕೇಳುವಂತೆ ರಾಜ್ಯಪಾಲರನ್ನು ಒತ್ತಾಯಿಸಿದೆ.

ಇದನ್ನೂ ಓದಿ:

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ ಜಾನ್ ಅರೋಕಿಯಸಾಮಿ ಮತ್ತು ವಿಷ್ಣು ರೆಡ್ಡಿ ಭಾಗವಹಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದರೊಂದಿಗೆ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಪಿ. ವಿಶ್ವನಾಥನ್ ವಿರುದ್ಧ ತನಿಖೆ ನಡೆಸುವಂತೆ ಬಿಜೆಪಿ ವಿನಂತಿಸಿದೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದು, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸಲು ಸ್ವತಂತ್ರ ತನಿಖೆ ಮತ್ತು ಸೂಕ್ತ ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !