ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ,ಹಿಂದು ಧರ್ಮದ ಕುರಿತು ಟೀಕೆ ಮಾಡಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಮುನೀರ್ ಗೆ ಭಾರತೀಯ ವಿದೇಶಾಂಗ ಸಚಿವಾಲಯ ಖಡಕ್ ತಿರುಗೇಟು ನೀಡಿದೆ.
ಜಮ್ಮು ಕಾಶ್ಮೀರ ನಮ್ಮ ಕತ್ತಿನ ರಕ್ತನಾಳವಾಗಿದೆ. ಹಾಗೂ ಅದು ಮುಂದೆಯೂ ಅದೇ ಆಗಿರುತ್ತದೆ ಎಂದು ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಭಾರತದ ವಿದೇಶಾಂಗ ಸಚಿವಾಲಯ, ನಿಮ್ಮ ಕತ್ತಿನ ರಕ್ತನಾಳದಲ್ಲಿ ವಿದೇಶ ಇರಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಹಾಗೂ ಅದು ಭಾರತದ ಕೇಂದ್ರಾಡಳಿತ ಪ್ರದೇಶ, ಪಾಕಿಸ್ತಾನದೊಂದಿಗಿನ ಜಮ್ಮುಕಾಶ್ಮೀರದ ಏಕೈಕ ಸಂಬಂಧವೆಂದರೆ ಆ ಪ್ರದೇಶವನ್ನು ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವುದಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ‘ಎರಡು ರಾಷ್ಟ್ರ’ ಹೇಳಿಕೆಗೂ ಪ್ರತಿಕ್ರಿಯಿಸಿದ ಜೈಸ್ವಾಲ್, ತಾನು ಅಕ್ರಮಿಸಿಕೊಂಡ ಕಾಶ್ಮೀರದ ಪ್ರದೇಶವನ್ನು ವಾಪಸ್ ಹಿಂದಿರುಗಿಸುವುದೊಂದು ಮಾತ್ರ ಪಾಕಿಸ್ತಾನದ ಜೊತೆ ಕಾಶ್ಮೀರಕ್ಕಿರುವ ಸಂಬಂಧವಾಗಿದೆ ಎಂದಿದ್ದಾರೆ.
ವಿದೇಶದಲ್ಲಿ ಪಾಕಿಸ್ತಾನ ಪ್ರಜೆಗಳ ಸಮಾವೇಶದಲ್ಲಿ ಮಾತನಾಡಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ಪಾಕಿಸ್ತಾನದ ಸೃಷ್ಟಿಗೆ ಆಧಾರವಾಗಿರುವ ದ್ವಿರಾಷ್ಟ್ರ ಸಿದ್ಧಾಂತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ ಮುಸ್ಲಿಮರು ಜೀವನದ ಎಲ್ಲಾ ವಿಚಾರಗಳಲ್ಲಿ ಹಿಂದೂಗಳಿಗಿಂತ ಭಿನ್ನರು ಎಂದು ಹೇಳಿಕೆ ನೀಡಿದ್ದರು. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು, ನಾವು ಒಂದೇ ರಾಷ್ಟ್ರವಲ್ಲ. ಅದಕ್ಕಾಗಿಯೇ ನಮ್ಮ ಪೂರ್ವಜರು ಈ ದೇಶವನ್ನು ರಚಿಸಲು ಹೋರಾಡಿದರು. ನಾವು ಹಿಂದುಗಳಿಗಿಂತ ತುಂಬಾ ವಿಭಿನ್ನರು, ನಮ್ಮ ಪೂರ್ವಜರು ಮತ್ತು ನಾವು ಈ ದೇಶದ ನಿರ್ಮಾಣಕ್ಕೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ಅದನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ. ನನ್ನ ಪ್ರೀತಿಯ ಸಹೋದರರೇ, ಸಹೋದರಿಯರೇ, ಹೆಣ್ಣುಮಕ್ಕಳೇ ಮತ್ತು ಪುತ್ರರೇ, ದಯವಿಟ್ಟು ಪಾಕಿಸ್ತಾನದ ಈ ಕಥೆಯನ್ನು ಮರೆಯಬೇಡಿ. ಪಾಕಿಸ್ತಾನದೊಂದಿಗಿನ ಅವರ ಬಾಂಧವ್ಯ ಎಂದಿಗೂ ದುರ್ಬಲವಾಗದಂತೆ ಈ ಕಥೆಯನ್ನು ನಿಮ್ಮ ಮುಂದಿನ ಪೀಳಿಗೆಗೆ ಹೇಳಲು ಮರೆಯಬೇಡಿ ಎಂದು ಅವರು ಹೇಳಿದ್ದರು.