September 12, 2026
Saturday, September 12, 2026
spot_img

ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ.

ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆಯೇ ಅಥವಾ ಬಸ್ಸಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಇದು ತನಿಖೆಯಿಂದ ದೃಢಪಡಬೇಕಿದೆ ಎಂದು ಕರ್ನೂಲ್ ಜಿಲ್ಲಾಧಿಕಾರಿ ಸಿರಿ ಹೇಳಿದ್ದಾರೆ.

ಕೆಲವರು ವೇಗವಾಗಿ ಬಂದ ಬೈಕ್‌ ಸವಾರ ಬಸ್ಸಿನ ಹಿಂಬದಿಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರೆ ಕೆಲವರು ಬಸ್ಸು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನುತ್ತಿದ್ದಾರೆ. ಒಂದು ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರೆ ಚಾಲಕ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. 

ಗುದ್ದಿದ ರಭಸಕ್ಕೆ ಬಸ್ಸಿನ ಕೆಳಭಾಗಕ್ಕೆ ಬೈಕ್‌ ನುಗ್ಗಿದೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್‌ ಟ್ಯಾಂಕ್‌ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ.

ಬೆಂಗಳೂರು ಮತ್ತು ಹೈದರಾಬಾದ್‌ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !