ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ವರ್ಷದ ಬಾಲಕಿ ಕೊಲೆ ಮಾಡಿ ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ರಿತೇಶಕುಮಾರ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶಿಸಿದೆ.
ಈ ನಡುವೆ ಈತನ ಮೂಲ ಯಾವುದು? ಕುಟುಂಬಸ್ಥರು ಯಾರು? ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ. ಏ. 13 ರಂದು ರಿತೇಶಕುಮಾರ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರಿಂದ ಪೊಲೀಸರು ಒತ್ತಡಕ್ಕೆ ಮಣಿದು ಸಂಜೆ ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆತನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವುದಕ್ಕಾಗಿ ಆತ ಇದ್ದ ಶೆಡ್ ಬಳಿ ಕರೆದುಕೊಂಡು ಹೋಗಿದ್ದರು. ರಾಯನಾಳ ಬ್ರಿಡ್ಜ್ ಬಳಿ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರೂ ಈತ ಪರಾರಿಯಾಗುವ ತನ್ನ ಪ್ರಯತ್ನ ಮಾತ್ರ ಮುಂದುವರೆಸಿದ್ದ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಈತನ ಮೇಲೆ ಗುಂಡು ಹಾರಿಸಿದ್ದರು. ಆಗ ಈತ ಸಾವಿಗೀಡಾಗಿದ್ದ.
ಈ ನಡುವೆ ಈತನ ಶವದ ಅಂತ್ಯಸಂಸ್ಕಾರ ಮಾಡಬಾರದು. ಸಾಕ್ಷ್ಯ ನಾಶವಾಗಬಹುದು ಎಂದು ಕೋರಿ ಬೆಂಗಳೂರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈತನ ಮರಣೋತ್ತರ ಪರೀಕ್ಷೆ ನಡೆಸಿ ಕೋರ್ಟ್ ಆದೇಶಕ್ಕಾಗಿ ಕೆಎಂಸಿಆರ್ಐ ವೈದ್ಯರು ಹಾಗೂ ಸಿಐಡಿ ಪೊಲೀಸರು ಕಾಯುವ ಅನಿವಾರ್ಯತೆ ಎದುರಾಗಿತ್ತು.
ಈ ನಡುವೆ ಶವ ಕೊಳೆಯುತ್ತಾ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರಿಗೆ ಶವ ಡಿಕಂಪೋಸ್ ಆಗುತ್ತಿದೆ. ಆದ ಕಾರಣ ಇದನ್ನು ವಶಕ್ಕೆ ಪಡೆಯಿರಿ ಎಂದು ಕೆಎಂಸಿಆರ್ಐ ಕೂಡ ಪತ್ರ ಬರೆದಿತ್ತು. ಸಿಐಡಿ ಪೊಲೀಸರು ಕೂಡ ಶವದ ಸಮಾಧಿ ಮಾಡುವ ಅಗತ್ಯವಿದೆ, ಶವ ಕೊಳೆಯುತ್ತಿದೆ ಎಂದು ಕೋರ್ಟ್ಗೆ ಮಾಹಿತಿ ನೀಡಿದ್ದರು. ಎಲ್ಲವನ್ನು ವಿಚಾರಣೆ ನಡೆಸಿರುವ ಕೋರ್ಟ್ ಇದೀಗ ಅಂತ್ಯ ಸಂಸ್ಕಾರ ಮಾಡಲು ಪರವಾನಗಿ ಕೊಟ್ಟಿದೆ. ಇದರಿಂದ ಸಿಐಡಿ ಪೊಲೀಸರು, ಕೆಎಂಸಿ ಆರ್ಐ ವೈದ್ಯರು ನಿಟ್ಟುಸಿರು ಬಿಡುವಂತಾಗಿದೆ.