ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ಈಗಾಗಲೇ ನ್ಯಾಯಾಲಯದಲ್ಲಿ ರದ್ದುಗೊಂಡ ಪ್ರಕರಣವನ್ನು ಪ್ರಸ್ತಾಪಿಸಿ ವಿರೋಧಿಗಳು ನನ್ನ ಮೇಲೆ ಕೆಸರೆರೆಚುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು.
ಮೀಸಲು ಅರಣ್ಯ ಒತ್ತುವರಿ ವಿಚಾರವಾಗಿ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ. 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂದರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು. ಅಲ್ಲದೆ ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ ಶಾಸಕನಾಗಿದ್ದೂ ಕೂಡಾ 1999 ರಲ್ಲಿ. 1987 ರಲ್ಲಿ ಪ್ರಭಾವ ಬೀರಲು ಹೇಗೆ ಸಾಧ್ಯ ಎಂದು ಸಚಿವರು ಪ್ರಶ್ನಿಸಿದರು.
ಕೇವಲ ದೂರಿನಲ್ಲಿ ನೀಡಿರುವ ಸರ್ವೇ ನಂಬರ್ಗಳಷ್ಟೇ ಅಲ್ಲದೇ ಸುಮಾರು 1700 ಏಕರೆ ಭೂಮಿಯನ್ನು ಮೀಸಲು ಅರಣ್ಯ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ನಾವು ಖರೀದಿಸಿದ್ದ ಜಮೀನಿನ ಬಗ್ಗೆಯೂ ಅರಣ್ಯ ಅಧಿಕಾರಿಗಳು ಎಫ್.ಓ.ಸಿ ನಂ. 16/2022-23 ನೋಟೀಸ್ ನೀಡಿದ್ದರು. ಈ ನೋಟಿಸ್ನ್ನು ಉಚ್ಚ ನ್ಯಾಯಾಲಯದ ಕಲಬುರ್ಗಿ ಪೀಠದಲ್ಲಿ ಪ್ರಶ್ನಿಸಿ ದಾವೆ ಹೂಡಲಾಗಿತ್ತು. ಸಿಆರ್ಎಲ್.ಪಿ. ನಂ. 201608/2022 ನಲ್ಲಿ ಅಡಿಯಲ್ಲಿ ನಡೆದ ವಿಚಾರಣೆಯಲ್ಲಿ ಎಫ್.ಓ.ಸಿ ನಂ. 16/2022-23 ನೋಟೀಸ್ ಅನ್ನು ರದ್ದು ಮಾಡಿದೆ. ಏಪ್ರಿಲ್ 18, 2023 ರಲ್ಲೇ ಉಚ್ಚನ್ಯಾಯಾಲಯ ರದ್ದುಗೊಳಿಸಿರುವ ಪ್ರಕರಣವನ್ನು ಪ್ರಸ್ತಾಪಿಸಿ ಈಗ ರಾಜ್ಯಪಾಲರಿಗೆ ದೂರು ನೀಡಿರುವ ಹಿಂದೆ ರಾಜಕೀಯ ಕುತಂತ್ರ ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದರು.
ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಗಮನಿಸಿದಲ್ಲಿ ಯಾವುದೇ ತಪ್ಪಿಲ್ಲದೇ ಇದ್ದರೂ ನನ್ನ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ತೇಜೋವಧೆ ಮಾಡುವ ಪ್ರಯತ್ನ ಇದಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಇತ್ತೀಚೆಗೆ ಸಚಿವರುಗಳ ಮೇಲೆ ರಾಜ್ಯಪಾಲರಿಗೆ ದೂರು ನೀಡುವುದು ಒಂದು ಹವ್ಯಾಸವಾಗಿಬಿಟ್ಟಿದೆ. ಈ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.