ಹೊಸದಿಗಂತ ವರದಿ, ಮಂಡ್ಯ:
ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಾಲಿನಿ (32) ಎಂಬಾಕೆಯೇ ಹತ್ಯೆಯಾಗಿದ್ದು, ಈಕೆಯ ಗಂಡ ಸುರೇಶ್ (40) ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಆರೋಪಿ.
ಘಟನೆ ವಿವರ: ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಹಾಗೂ ಶಾಲಿನಿ ಕಳೆದ 15 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದರೂ ಇಬ್ಬರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ಜೊತೆಗೆ ಅತ್ತೆ-ಸೊಸೆ ನಡುವೆಯೂ ಜಗಳ ನಡೆಯುತ್ತಲೇ ಇತ್ತು. ಹೊಂದಾಣಿಕೆ ಕೊರತೆಯಿಂದ ಬೇಸತ್ತ ಶಾಲಿನಿ ಕಳೆದ ನಾಲ್ಕು ವರ್ಷಗಳ ಹಿಂದೆ ಗಂಡ ಸುರೇಶ್ ನಿಂದ ವಿಚ್ಚೇಧನ ಪಡೆದಿದ್ದಾರೆ.
ನಿನ್ನೆ ಸಂಜೆ ಕೂಲಿ ಕೆಲಸ ಮುಗಿಸಿಕೊಂಡು ರಾಗಿ ಮುದ್ದನಹಳ್ಳಿ ಗೇಟ್ನಿಂದ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಸುರೇಶ ಪತ್ನಿಯನ್ನು ಪಕ್ಕದ ಕಬ್ಬಿನ ಗದ್ದೆಗೆ ಎಳೆದೊಯ್ದು ಚಾಕುವಿನಿಂದ ಕುತ್ತಿಗೆ ಕೊಯ್ದು ಬಳಿಕ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಡಿವೈಎಸ್ಪಿ ಮಂಜುನಾಥ್, ವೃತ್ತ ನಿರೀಕ್ಷಕ ಆನಂದಗೌಡ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.