ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಎಲ್ಲಾ ಸರ್ಕಾರಿ ಕಾಲೇಜುಗಳು ಮತ್ತು ಶಾಲೆಗಳಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಹಾಗೂ ಸರ್ಕಾರಗಳು ಕ್ರಮಕೈಗೊಳ್ಳುತ್ತಿವೆ. ಈ ಹಿನ್ನಲೆಯಲ್ಲಿ ಹೈದರಾಬಾದ್ ನ ಸರೂರ್ ನಗರದಲ್ಲಿ ಬೆಳಕಿಗೆ ಬಂದಿರುವ ಘಟನೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಸ್ಥಳೀಯವಾಗಿ ಸರೂರ್ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಅತ್ಯಂತ ಅಮಾನವೀಯ ಪರಿಸ್ಥಿತಿ ಎದುರಿಸುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲಿ ಓದುತ್ತಿರುವ ಸುಮಾರು 700 ವಿದ್ಯಾರ್ಥಿನಿಯರಿಗೆ ಒಂದೇ ಶೌಚಾಲಯವಿದ್ದು ಅಳಲು ತೋಡಿಕೊಂಡಿದ್ದಾರೆ.
ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕು ಅದೂ ಅಲ್ಲದೆ ಬಾತ್ ರೂಂ ಕಳಪೆಯಾಗಿರುವ ಕಾರಣ ಕೆಲವೊಮ್ಮೆ ಪಿರಿಯಡ್ಸ್ ಬರದಂತೆ ಮಾತ್ರೆಗಳನ್ನು ಸೇವಿಸುವ ಪರಿಸ್ಥಿತಿ ಬಂದೊದಗಿದೆ ಎಂದು ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಈ ಹಿಂದೆಯೂ ಇದೇ ವಿಚಾರವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಂತರ ಸಬಿತಾ ಇಂದ್ರ ರೆಡ್ಡಿ ಬಂದು ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸಿಕೊಡುವುದಾಗಿ ಹೇಳಿದ್ದರಂತೆ. ಇದುವರೆಗೂ ಭರವಸೆ ಈಡೇರಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾನೂನು ಶಿಕ್ಷಣ ಪಡೆಯುತ್ತಿರುವ ಮಣಿದೀಪ್ ಎಂಬ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ ತೆಲಂಗಾಣ ಹೈಕೋರ್ಟ್ ಗೆ ಸಮಗ್ರ ಪತ್ರ ಬರೆದಿದ್ದಾರೆ. ಹಾಗಾಗಿ ನ್ಯಾಯಾಲಯ ಅದನ್ನು ಸುಮೋಟೋ ಆಗಿ ಸ್ವೀಕರಿಸಿದೆ. ಇದಲ್ಲದೇ ಇದಕ್ಕೆ ಹೈಕೋರ್ಟ್ ತೀವ್ರವಾಗಿ ಪ್ರತಿಕ್ರಿಯಿಸಿದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಅಂತರ ಮಂಡಳಿ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 25ರೊಳಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಇಷ್ಟು ಗಂಭೀರ ಸಮಸ್ಯೆ ಇದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ಕೆಂಡಾಮಂಡಲವಾಗಿದೆ. ಇತ್ತ ಹೈಕೋರ್ಟ್ ತರಾಟೆಗೆ ತೆಲಂಗಾಣ ಸರ್ಕಾರ ಥಂಡಾ ಹೊಡೆದಿದೆ.