ನಾನು ಹಿಂದು, ನಮ್ಮಪ್ಪ- ಅವ್ವನು ಹಿಂದು : ಸಿ.ಟಿ. ರವಿಗೆ ಟಾಂಗ್ ಕೊಟ್ಟ ಸಿದ್ದು

ದಿಗಂತ ವರದಿ ವಿಜಯಪುರ:

ನಾನು ಹಿಂದು, ನಮ್ಮಪ್ಪ- ಅವ್ವನು ಹಿಂದು ಎಂದು ಸಿ.ಟಿ. ರವಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.

ಜಿಲ್ಲೆಯ ಸಿಂದಗಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದು ಅಲ್ಲವಾ ?, ನಮ್ಮವ್ವ-ನಮ್ಮಪ್ಪ ಹಿಂದುಗಳಲ್ಲವಾ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಕಿಡಿಕಾರಿದರು.

ಬಿಜೆಪಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದರು.

ಅಲ್ಲದೇ, ಈಗ ಏಳು ಕೆಜಿ ಇದ್ದ ಅಕ್ಕಿ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಏಕೆ ಕೊಡುತ್ತಿಲ್ಲ ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದರು.

ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲೆ ರೌಡಿ ಶೀಟರ್ ವಿಷಯ ಬಗ್ಗೆ ಪ್ರತಿಕ್ರಿಯಿಸಿ, ರೌಡಿ ಶೀಟರ್ ಪ್ರಕರಣ ದಾಖಲಿಸಬಾರದು. ನೆಲ, ಜಲ, ಭಾಷೆ ಎಲ್ಲರ ಮೂಲಭೂತ ಹಕ್ಕು ಆಗಿದೆ. ರಾಜ್ಯಗಳ ಸ್ವಾಯತ್ತ ಹಕ್ಕು ಯಾರೂ ಕಸಿದುಕೊಳ್ಳುವಂತಿಲ್ಲ. ಮಹಾಜನ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಲಾಗಿದೆ. ಆದರೂ ಕಾಲು ಕೆರೆದುಕೊಂಡು ಜಗಳಕ್ಕೆ ಬರುವುದು ಸರಿಯಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!