ಹೊಸ ದಿಗಂತ ಡಿಜಿಟಲ್ ಡೆಸ್ಕ್
ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಅದನ್ನು ಬಯಸುವುದೂ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಮಂಗಳವಾರ ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದ ನಿತೀಶ್ ಕುಮಾರ್, ತಾವು ಪ್ರಧಾನಿ ಅಭ್ಯರ್ಥಿ ಎಂಬ ಬಗೆಗಿನ ಊಹಾಪೋಹಗಳನ್ನು ನಿರಾಕರಿಸಿದರು.
ನಾವೆಲ್ಲ ಒಟ್ಟಾಗಿರುವುದರಿಂದ ನಾನಿಲ್ಲಿಗೆ ಆಗಮಿಸಿದ್ದೇನೆ. ವಿವಿಧ ಪಕ್ಷಗಳು ಒಟ್ಟಾಗಿ ಸೇರಿದರೆ ಅದೊಂದು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ . ವಿವಿಧ ರಾಜ್ಯಗಳಲ್ಲಿನ ಎಡಪಕ್ಷಗಳು, ಪ್ರಾದೇಶಿಕ ಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಾದರೆ ಅದೊಂದು ದೊಡ್ಡ ವಿಷಯವಾಗಲಿದೆ ಎಂದು ಅವರು ತಿಳಿಸಿದರು.
ಇಂದು ಬೆಳಗ್ಗೆ ನಿತೀಶ್ ಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಮುಂಬರುವ 2024 ರ ಲೋಕಸಭೆ ಚುನಾವಣೆಯ ಕಾರ್ಯತಂತ್ರ ಮತ್ತು ಸಮಾನ ಮನಸ್ಕ ಪಕ್ಷಗಳನ್ನು ಒಟ್ಟಿಗೆ ತರುವ ಸಾಧ್ಯತೆಯ ಬಗ್ಗೆ ಚರ್ಚಿಸಿದರು.
ಬಿಹಾರ ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ವೇಳೆ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿದ್ದಾರೆ.