ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನಕಪುರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಹುಮ್ಮಸ್ಸು ನೋಡಿದರೆ ನನ್ನ ಗೆಲುವು 100ರಷ್ಟು ಖಚಿತವಾಗಿದೆ. ಕನಕಪುರದಲ್ಲಿ ಅತಿ ಹೆಚ್ಚು ಮತಗಳಿಂದ ಗೆಲ್ಲಲಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಬಿಜೆಪಿ-ಜೆಡಿಎಸ್ ಅತಿ ಹೆಚ್ಚು ಮತಗಳನ್ನು ಗಳಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಮಂಜುನಾಥ್ ಅವರಿಗೆ ಕ್ಷೇತ್ರ ಪರಿಚಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನನಗೆ ಕ್ಷೇತ್ರ ಪರಿಚಯ ಇಲ್ಲದೇ ಇರಬಹುದು ಆದರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತೀರಿಸುತ್ತೇವೆ ಅಂತಾ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಹೀಗಾಗಿ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎನ್ನುವ ಮೂಲಕ ಗೆಲ್ಲುವುದು ಖಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವಿನ ಸ್ಪರ್ಧೆ ರಾಮ-ರಾವಣ ನಡುವಿನ ಯುದ್ಧ ಎಂಬಂತೆ ಶಾಸಕ ಮುನಿರತ್ನ ಹೇಳಿಕೆ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ, ನಾನು ಆ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದರು.