ಹೊಸದಿಗಂತ ವರದಿ, ಮೈಸೂರು:
ಜೆಡಿಎಸ್ಗೆ ಟಾಟಾ ಹೇಳಿರುವ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದಾರೆ. ಇದರಿಂದಾಗಿ ಅವರ ಎದುರು ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ಪಕ್ಷದ ಕಾರ್ಯಕರ್ತರು, ಮುಖಂಡರ ಪ್ರಶ್ನೆಗೆ ಇದೀಗ ಜೆಡಿಎಸ್ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಟ್ಟಿರುವ ಉತ್ತರ ಇಡೀ ಜೆಡಿಎಸ್ನಲ್ಲಿ ಸಂಚಲನವನ್ನುoಟು ಮಾಡಿದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮೈಸೂರಿನಲ್ಲಿ ಹೇಳುವ ಮೂಲಕ ರಾಜಕೀಯವಾಗಿ ಹೊಸ ಸಂಚಲವನ್ನುoಟು ಮಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಸಮಸ್ಯೆ ಬಗೆಹರಿಸಿ, ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಗೆ ಯಾರು ಬರ್ತಾರೆ. ಹೀಗೆ ಜೆಡಿಎಸ್ ಕಾರ್ಯಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾನೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತೇನೆ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ರಾಜಕಾರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬೇಡ ಎಂದು ನಾನು, ಅವರು ಚರ್ಚೆ ಮಾಡಿದ್ದೇವೆ. ಕುಟುಂಬ ರಾಜಕಾರಣದ ಹೆಸರಿನಲ್ಲಿ ನಮ್ಮ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರದಿಂದ ದೂರವಾಗಲು ಇಂತಹ ಚರ್ಚೆಯನ್ನ ನಾನು ಅನಿತಾ ಕುಮಾರಸ್ವಾಮಿ ಮಾಡಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನ ಚುನಾವಣೆ ಘೋಷಣೆ ನಂತರ ಮಾಡುತ್ತೇವೆ ಎಂದರು.
ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ರಾಜಕಾರಣಕ್ಕೆ ತರುವುದಕ್ಕೆ ನನಗೆ ಇಷ್ಟವಿರಲಿಲ್ಲ. ಮುಖಂಡರ ಒತ್ತಡದ ಮೇರೆಗೆ ಅವರನ್ನ ರಾಜಕಾರಣಕ್ಕೆ ತಂದೆ. ಕುಟುಂಬ ರಾಜಕಾರಣದ ವಿಚಾರದಲ್ಲಿ ನಾನು ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು ನಮ್ಮ ಸಹೋದರರು ಬೇರೆಯಾಗಿದ್ದೇವೆ. ಹಾಗಾಗಿ ನಾನು, ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪ ಮಾಡುತ್ತಿದ್ದೇನೆ. ಒಟ್ಟಾರೆ ಹೆಚ್.ಡಿ ದೇವೇಗೌಡರ ಕುಟುಂಬದ ಬಗ್ಗೆ ನಾನು ಮಾತನಾಡುತ್ತಿಲ್ಲ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.