ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಎ ಕಾಯ್ದೆಯ ವಿರುದ್ಧ ಇಂಡಿಯಾ ಒಕ್ಕೂಟದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಹಿನ್ನೆಲೆ ಅವರ ನಿರ್ಧಾರ ಖಂಡಿಸಿ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದ ಹಿಂದು, ಸಿಖ್ ನಿರಾಶ್ರಿತರು ದೆಹಲಿ ಕಾಂಗ್ರೆಸ್ ಮುಖ್ಯಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಭಿತ್ತಿಚಿತ್ರ ಹಿಡಿದುಕೊಂಡ ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಿಜೆಪಿ ನೇತೃತ್ವದ ಸರ್ಕಾರವು ಸಿಎಎ ಜಾರಿಗೊಳಿಸಿ ನಮಗೆ ಪೌರತ್ವ ನೀಡಲು ಹೊರಟಿರುವಾಗ, ಬೇರೆ ಪಕ್ಷಗಳು ಏಕೆ ವಿರೋಧ ವ್ಯಕ್ತಪಡಿಸುತ್ತಿವೆ. ಈ ಕಾನೂನನ್ನು ವಿರೋಧಿಸುತ್ತಿರುವವರ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು.
ಸಿಎಎ ಜಾರಿ ವಿರೋಧಿಸಿ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಲೈನ್ಸ್ನಲ್ಲಿರುವ ಅವರ ನಿವಾಸದ ಮುಂದೆ ಗುರುವಾರ ಹಿಂದು, ಸಿಖ್ ನಿರಾಶ್ರಿತರು ಪ್ರತಿಭಟನೆ ನಡೆಸಿದ್ದರು.