ಹೊಸದಿಗಂತ ವರದಿ ಕಲಬುರಗಿ:
ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರು ಭಾನುವಾರ ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಪಕ್ಷದ ಹೈಕಮಾಂಡ್ ನಾಯಕರು,ಕಾಂಗ್ರೆಸ್ ವರಿಷ್ಠರು, ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ಹೈಕಮಾಂಡ್ ನಾಯಕರಿಗೆ ಧನ್ಯವಾದ
ನಾಡಿನ ಹಾಗೂ ನನ್ನ ಪ್ರೀತಿಯ ಜೇವರ್ಗಿ ಜನತೆಯ ಹಾರೈಕೆ ಮತ್ತು ಆಶೀರ್ವಾದದಿಂದ ದೇವರ ಹೆಸರಿನಲ್ಲಿ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ ಪಕ್ಷದ ಹೈಕಮಾಂಡ್ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಅಜಯ್ ಸಿಂಗ್ ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಸಮಸ್ತ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

‘ಜನರ ಸೇವೆಯೇ ನನ್ನ ಗುರಿ’
ಕಲಬುರಗಿ ಜಿಲ್ಲೆಯ ಹಾಗೂ ಜೇವರ್ಗಿ ಮತಕ್ಷೇತ್ರದ ಜನತೆ ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ತಾನು ಸದಾ ಚಿರಋಣಿಯಾಗಿರುವುದಾಗಿ ಹೇಳಿದ ಅವರು,ಹಗಲಿರುಳು ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತನಿಗೂ ನಾನು ಆಭಾರಿ. ನಿಮ್ಮ ನಂಬಿಕೆಯೇ ನನ್ನ ಬಲ, ನಿಮ್ಮ ಸೇವೆಯೇ ನನ್ನ ಗುರಿ ಎಂದು ತಮ್ಮ ಸಾಮಾಜಿಕ ಜಾಲತಾಣ ಫೆಸ್ ಬುಕ್ ಹಾಗೂ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾದ್ಯಂತ ಸಂಭ್ರಮದ ವಾತಾವರಣ
ಸಚಿವ ಸ್ಥಾನ ಘೋಷಣೆಯಾಗುತ್ತಿದ್ದಂತೆ ಜೇವರ್ಗಿ ಕ್ಷೇತ್ರ ಸೇರಿದಂತೆ ಕಲಬುರಗಿ ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಜಯ್ ಸಿಂಗ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದು, ಸಚಿವರಾಗಿ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೊಸ ಚೈತನ್ಯ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



