ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.ಜೊತೆಗೆ ಆರೋಪಿ ಫಯಾಜ್ನನ್ನು ಗಲ್ಲೇರಿಸಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ನೇಹಾ ಹಂತಕ ಫಯಾಜ್ ತಂದೆ ಬಾಬಾ ಸಾಹೇಬ್ ಪ್ರತಿಕ್ರಿಯಿಸಿದ್ದು, ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ.
ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಮನವಿ ಮಾಡಿದ ಬಾಬಾ ಸಾಹೇಬ್, ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಅಂಗಲಾಚಿದ್ದಾರೆ.
ಎರಡು ವರ್ಷದಿಂದ ಮಗ ನಮ್ಮ ಬಳಿ ಇರಲಿಲ್ಲ. ಹೆಚ್ಚಿನ ಶಿಕ್ಷಣಕ್ಕಾಗಿ ನಗರ ಪ್ರದೇಶಕ್ಕೆ ಹೋಗಿದ್ದನು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸೋದು ತಪ್ಪಲ್ಲ. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ಅವಳು ನನ್ನ ಮಗಳಿದ್ದ ಹಾಗೆ. ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದರು.