ಹೊಸದಿಗಂತ ವರದಿ ಹುಬ್ಬಳ್ಳಿ:
ಮುಂಬರುವ 2023ರ ಚುನಾವಣೆಯಲ್ಲಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಮತ್ತೊಬ್ಬರನ್ನು ಕಣಕ್ಕೆ ಇಳಿಸುವ ಅವಶ್ಯಕತೆ ಇಲ್ಲ. ಈ ಬಾರಿಯೂ ನಾನೇ ಸ್ಪರ್ಧಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಚುನಾವಣೆಯಲ್ಲಿ ಕೂಡ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದೀಗ ಕೂಡ ಆ ಮಾತುಗಳು ಕೇಳಿ ಬರುತ್ತಿದ್ದು, ಅವೆಲ್ಲವೂ ಊಹಾಪೋಹ. ಮುಂಬರುವ ಚುನಾವಣೆಯಲ್ಲಿ ನಾನೇ ಸೆಂಟ್ರಲ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದರು.
ಈಗಾಗಲೇ ಭ್ರಷ್ಟಾಚಾರ ತನಿಖೆ ಕುರಿತು ಲೋಕಾಯುಕ್ತದಲ್ಲಿ ದೂರು ಸಲ್ಲಿಕೆ ಆಗಿದೆ. ಅದರೊಟ್ಟಿಗೆ ಈ ಹಿಂದಿನ ಸರಕಾರಗಳಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆಯಾಗಲಿ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮಲ್ಲಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೆ ದೂರು ನೀಡಲಿ. ಅದು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡುವುದು. ಹಿಟ್ ಆ್ಯಂಡ್ ರನ್ ಆರೋಪ ಮಾಡುವುದು ಸರಿಯಲ್ಲ ಎಂದು ಭ್ರಷ್ಟಾಚಾರ ಕುರಿತಂತೆ ಹಿಂದೆ ಆಡಳಿತ ನಡೆಸಿದ ಸರಕಾರಗಳ ತನಿಖೆಗೆ ಆಗ್ರಹಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಪತ್ರಕರ್ತರಿಗೆ ಉಡುಗೊರೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಉಡುಗೊರೆ ಪಡೆದುಕೊಂಡವವರಿದ್ದರೆ ಬೇಕಾದರೆ ದೂರು ಕೊಡಲಿ ಎಂದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಮಹಾಪೌರರು ಪತ್ರ ಬರೆದಿರುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಅನುದಾನ ಸಿಗಲಿದೆ ಎಂದರು.