ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಬಿ ಶ್ರೀರಾಮುಲು ಮತ್ತು ಶಾಸಕ ಜನಾರ್ಧನ ರೆಡ್ಡಿ ನಡುವೆ ಬಿರುಕು ಮೂಡಿದೆ. ಇದರ ಮಧ್ಯ ಬಿ ಶ್ರೀರಾಮುಲು ಅವರು ಮತ್ತೊಂದು ಹೇಳಿಕೆ ನೀಡಿದ್ದು, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ್ಲಿಗಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು.
ಇಂದು ಬಳ್ಳಾರಿಯಲ್ಲಿ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದು, ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಜನಾರ್ದನ ರೆಡ್ಡಿ ಅವರು ಹೇಳಿಕೆ ನೀಡಿದ್ದರಿಂದ ನೆನ್ನೆ ಶ್ರೀರಾಮುಲು ಪಕ್ಷ ತೊರೆಯುವುದಾಗಿ ಬೇಸರದಿಂದ ಹೇಳಿಕೆ ನೀಡಿದ್ದರು. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮುಲು ಅವರು ಘೋಷಿಸಿದ್ದಾರೆ
ನನಗೂ ರಾಜ್ಯಾಧ್ಯಕ್ಷ ಆಗುವ ಆಸೆ
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಚುನಾವಣೆ ನಡೆಯಲಿದ್ದು , ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನವನ್ನು ಕೊಟ್ಟರೆ ಒಪ್ಪಿಕೊಳ್ಳುತ್ತೇನೆ. ಸಣ್ಣವರೆಲ್ಲ ರಾಜ್ಯಾಧ್ಯಕ್ಷರಾಗುತ್ತಿದ್ದಾರೆ . ಅದಕ್ಕಾಗಿ ರಾಜ್ಯಾಧ್ಯಕ್ಷರ ಆಯ್ಕೆಗೆ ವೋಟಿಂಗ್ ಮಾಡಿದ್ದಾರೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ನನಗೂ ಅಧ್ಯಕ್ಷರಾಗಬೇಕೆಂಬ ಆಸೆ ಇದೆ . ನೇಮಿಸಿದರೆ ಒಪ್ಪಿಕೊಳ್ಳುತ್ತೇನೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಎಲೆಕ್ಷನ್ ಮಾಡಿದರೆ ಒಪ್ಪಿಕೊಳ್ಳಲ್ಲ. ನಾನು ಎಲೆಕ್ಷನ್ ನಲ್ಲಿ ಸೋತಿದ್ದೇನೆ. ನಿರುದ್ಯೋಗಿಯಾಗಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಕೂಡ್ಲಿಗಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಕೂಡ್ಲಿಗಿಯಲ್ಲಿ ಮುಂದುವರಿಯುವೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶ್ರೀರಾಮುಲು ತಿಳಿಸಿದರು.