ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಾನವನಗಳ ಭೂಮಿಯ ಶೇ.5ರಷ್ಟು ಭಾಗವನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ತಿದ್ದುಪಡಿ ಮಸೂದೆ ವಾಪಸ್ ಪಡೆದಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಮಸೂದೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ತಿರುಗೇಟು ನೀಡಿ, ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಉದ್ಯಾನವನಗಳ ಜಾಗವನ್ನು ಯಾವ ರೀತಿಯಲ್ಲಿ ಬಳಸಿದ್ದಾರೆ ಎಂಬುದರ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ಅಡ್ಡಿ
ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿದ ಡಿಕೆಶಿ, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಟೀಲ್ ಬ್ರಿಡ್ಜ್ ಯೋಜನೆ ಪ್ರಸ್ತಾಪಿಸಿದಾಗಲೂ ಬಿಜೆಪಿ ವಿರೋಧಿಸಿತ್ತು ಎಂದು ನೆನಪಿಸಿದರು. ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರತಿಪಕ್ಷ ನಾಯಕರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:
ತಿದ್ದುಪಡಿ ಮಸೂದೆ ಕೇವಲ ಅಭಿವೃದ್ಧಿಗಾಗಿಯೇ ಹೊರತು ಲಾಲ್ಬಾಗ್ ಸೇರಿದಂತೆ ನಗರದ ಯಾವುದೇ ಉದ್ಯಾನವನದ ಸೌಂದರ್ಯಕ್ಕೆ ಧಕ್ಕೆ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಮಸೂದೆಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಿ, ಜನರಿಂದ ಸಲಹೆ-ಅಭಿಪ್ರಾಯಗಳನ್ನು ಪಡೆಯಲಾಗುವುದು. ಬಳಿಕ ಅಗತ್ಯ ಬದಲಾವಣೆಗಳೊಂದಿಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ಮಂಡಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.



