ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.

ಮಂಗನ ಕಾಯಿಲೆ ನಿಯಂತ್ರಣ ಬಗ್ಗೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.‌

ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. 2 ಸಾವಿಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿಕೆ ಕಾರ್ಯಕ್ರಮ ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಸಚಿವರು ಭರವಸೆ ನೀಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!