ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಭಾರತೀಯ ಜನತಾ ಪಕ್ಷದ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದು “ಬಿಜೆಪಿಗೆ ಧೈರ್ಯವಿದ್ದರೆ ನಮ್ಮಂತೆ ಪಕ್ಷದ ಅಧ್ಯಕ್ಷೀಯ ಚುನಾವಣೆ ನಡೆಸಲಿ” ಎಂದು ಹೇಳಿದ್ದಾರೆ.
ಇಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿಗೆ ಧೈರ್ಯವಿದ್ದರೆ ಅವರು ನಮ್ಮಂತೆ ಪಕ್ಷದ ಅಧ್ಯಕ್ಷೀಯ ಚುನಾವಣೆ ನಡೆಸಲಿ. ಕೆಲವೊಮ್ಮೆ ಅವರು ಗಡ್ಕರಿ ಅವರನ್ನು ಅಧ್ಯಕ್ಷರನ್ನಾಗಿ ಮಾಡುತ್ತಾರೆ ಮತ್ತು ಕೆಲವೊಮ್ಮೆ ರಾಜನಾಥ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎಂದು ಕುಟುಕಿದ್ದಾರೆ.
ಯುವ ನಾಯಕರು ಕಾಂಗ್ರೆಸ್ ಪಕ್ಷ ತೊರೆಯುತ್ತಿರುವ ವಿಚಾರದ ಬಗ್ಗೆಯೂ ಮಾತನಾಡಿದ ಅವರು . “ಯುವಕರು ತಮ್ಮ ಒಳ್ಳೆಯ ದಿನಗಳು ಬರುತ್ತವೆ ಎಂದು ಕಾಯಬೇಕು, ಅವರಲ್ಲಿ ಕೆಲವರು, ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್ ಮತ್ತು ಪಕ್ಷ ತೊರೆದ ಆರ್ಪಿಎನ್ ಸಿಂಗ್ ಒಂದು ರೀತಿಯ ಹುಚ್ಚಿನಲ್ಲಿದ್ದಾರೆ. ಅನುಭವಕ್ಕೆ ಬದಲಿ ಇಲ್ಲ, ಪಕ್ಷವನ್ನು ತೊರೆದವರು ಅವಕಾಶವಾದಿಗಳು” ಎಂದು ಹೇಳಿದ್ದಾರೆ.
ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಪ್ರಶ್ನಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರವು ಇಡಿ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸಿಬಿಐ ಮತ್ತಿತರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜಕೀಯಕ್ಕೆ ಸಂಬಂಧವೇ ಇಲ್ಲದ ನನ್ನ ಸಹೋದರನ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.