ಹೊಸದಿಗಂತ ವರದಿ ಮೈಸೂರು:
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಜಾತಿಗಲಾಟೆ ರಾಜಕೀಯ ಬಿಟ್ಟರೆ ಬೇರೇನೂ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಹಾಗಾಗಿ ಈ ಬಾರಿ ಮತದಾರರು ಬಿಜೆಪಿಯನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮಂಗಳವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬಹಳ ಅಭಿವೃದ್ಧಿ ಕಾರ್ಯವನ್ನ ಮಾಡಿದೆ. ಮೈಸೂರಿನ ಹೂಟಗಳ್ಳಿ ನಗರಸಭೆ ಮಾಡಲಾಗಿದೆ. ಶ್ರೀರಾಮಪುರ, ಕಡಕಳ ಪಟ್ಟಣ ಪಂಚಾಯಿತಿ ಸೇರಿದಂತೆ ನಾಲ್ಕು ಸ್ಥಳೀಯ ಸಂಸ್ಥೆಗಳನ್ನು ಸೇರಿ ಗ್ರೇಟರ್ ಮೈಸೂರು ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದು ಬಿಜೆಪಿಯ ಕನಸಾಗಿದೆ ಎಂದು ತಿಳಿಸಿದರು.
ಇನ್ನೂ 18- 20 ತಿಂಗಳಲ್ಲಿ ಜಿಲ್ಲೆಯ ಪ್ರತಿಯೊಂದು ಮನೆಗೂ ಜಲಜೀವನ್ ಯೋಜನೆ ಹಾಗೂ ಅಮೃತ್ ಯೋಜನೆ-2 ಅಡಿ ಕಾವೇರಿ ಮತ್ತು ಕಬಿನಿ ಜಲಾಶಯ, ನದಿಗಳಿಂದ ಶುದ್ದ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಆ ಮೂಲಕ ಕುಡಿಯುವ ನೀರಿನ ಸಮಸ್ಯೆ ಯನ್ನು ಬಗೆಹರಿಸಲಾಗುತ್ತದೆ ಎಂದು ಹೇಳಿದರು.
ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಶಾಸಕ ಎಲ್.ನಾಗೇಂದ್ರ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕೆ. ಆರ್ ಆಸ್ಪತ್ರೆಯನ್ನು ಪತ್ರೆಯನ್ನು 80ವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.ಅಲ್ಲದೆ ಈಗಾಗಲೇ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ 130 ಕೋಟಿ ರೂಪಾಯಿ ಮಂಜುರಾಗಿದ್ದು, ಇದರಲ್ಲಿ ಈಗಾಗಲೇ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಶಾಸಕ ಎನ್ ನಾಗೇಂದ್ರ ಅವರನ್ನು ಕ್ಷೇತ್ರದ ಮತದಾರರು ಮತ್ತೊಮ್ಮೆ ಆಯ್ಕೆ ಮಾಡಿಕೊಟ್ಟರೆ, ಅವರು ಸಚಿವರಾಗಿ ಬರ್ತಾರೆ ಎಂದು ತಿಳಿಸಿದರು. ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಟಿ.ಎಸ್.ಶ್ರೀ ವತ್ಸ ಅವರು, ಪಕ್ಷದ ಕ್ರಿಯಾಶೀಲ ಸಂಘಟಕರಾಗಿದ್ದು, ಸಾಮಾನ್ಯ ಹಿನ್ನೆಲೆಯಿಂದ ಬಂದ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ.ಅವರನ್ನು ಮತದಾರರು ಗೆಲ್ಲಿಸಿಕೊಟ್ಟರೆ ಕ್ಷೇತ್ರ ಸಮಗ್ರವಾಗಿ ಅಭಿವೃದ್ಧಿ ಆಗಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂದೇಶಸ್ವಾಮಿ ಎರಡು ಬಾರಿ ಸ್ಪರ್ಧಿಸಿದ್ದು, ಮೂರನೇ ಬಾರಿಗೆ ಕಣಕ್ಕೆ ಇಳಿದಿದ್ದಾರೆ ಎಂದರು.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಒಂದೇ ಕುಟುಂಬಕ್ಕೆ ಅಧಿಕಾರವನ್ನು ನೀಡುತ್ತಾ ಬರುತ್ತಿರುವುದರಿಂದ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ, ಹಾಗಾಗಿ ಈ ಬಾರಿ ಮತದಾರರು ಒಂದೇ ಕುಟುಂಬಕ್ಕೆ ಅಧಿಕಾರ ನೀಡುವುದನ್ನು ಕೊನೆಗಾಣಿಸಬೇಕು ಎಂದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಈ ಬಾರಿ ಕವೀಶ್ ಗೌಡರನ್ನು ಕಣಕ್ಕೆ ಇಳಿಸಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗೂ ಕೂಡ ಬಿಜೆಪಿ ಸರ್ಕಾರಹೆಚ್ಚಿನ ಆದ್ಯತೆಯನ್ನು ನೀಡಿದೆ. ಈಗಾಗಲೇ ಈ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.