ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ದೇಶ ಹಿಂದು ರಾಷ್ಟ್ರ (Hindu Nation) ವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ (Dr B.R Ambedkar) ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದು ರಾಷ್ಟ್ರವಾದರೆ ದೇಶಕ್ಕೇ ತೊಂದರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ದಾವಣಗೆರೆಯ (Davanagere) ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದು ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರನೇ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ ಎಂದರು.
ಇವತ್ತು ಜಾತ್ಯಾತೀತ ತತ್ವಕ್ಕೆ ಅಪಾಯ ಬಂದಿದೆ. ಬಿಜೆಪಿ (BJP) ಹಾಗೂ ಮಾತೃ ಸಂಸ್ಥೆ ಆರ್ಎಸ್ಎಸ್ನಿಂದ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದು ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನು ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನು ಕಟ್ಟಬೇಕು. ದೇಶಕ್ಕೆ ಉಜ್ವಲ ಭವಿಷ್ಯವಿದೆ ಎಂದು ಹೇಳಿದರು.