September 17, 2026
Thursday, September 17, 2026
spot_img

ಪ್ರಧಾನ್ ರಾಜೀನಾಮೆ ಕೊಟ್ರೆ, ಪ್ರಧಾನಿ ಸೇಫ್! ಅಖಿಲೇಶ್ ಯಾದವ್ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಈ ವಿಚಾರವಾಗಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಸರ್ಕಾರದ ವಿರುದ್ಧ ಅಖಿಲೇಶ್ ತೀವ್ರ ವಾಗ್ದಾಳಿ

ಸಂಸತ್ತಿನಲ್ಲಿ ಸುದೀರ್ಘವಾಗಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಖಿಲೇಶ್ ಯಾದವ್, ದೇಶದ ಯುವಜನತೆ ಮತ್ತು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದರು. “ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವ ಮೂಲಕ ಕೇಂದ್ರ ಸರ್ಕಾರವು ತನ್ನ ಪ್ರಧಾನ ಮಂತ್ರಿಯ ಪ್ರತಿಷ್ಠೆಯನ್ನು ರಕ್ಷಿಸಿಕೊಳ್ಳಲು ಯತ್ನಿಸಿದೆ. ಬಿಜೆಪಿ ನಾಯಕರು ಪ್ರಮುಖ ಸಚಿವರನ್ನು ಪದಚ್ಯುತಗೊಳಿಸಿ, ಪ್ರಧಾನಿಯನ್ನು ಕಂಟಕದಿಂದ ಪಾರು ಮಾಡಿದ್ದಕ್ಕಾಗಿ ನಿಟ್ಟುಸಿರು ಬಿಡುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

ವಿದ್ಯಾರ್ಥಿಗಳ ಒಗ್ಗಟ್ಟಿಗೆ ಅಭಿನಂದನೆ

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಬೀದಿಗಿಳಿದು ಹೋರಾಡಿದ ವಿದ್ಯಾರ್ಥಿ ಸಮುದಾಯದ ಮನೋಬಲ ಹಾಗೂ ಒಗ್ಗಟ್ಟನ್ನು ಅಖಿಲೇಶ್ ಮುಕ್ತಕಂಠದಿಂದ ಶ್ಲಾಘಿಸಿದರು. ಯುವಶಕ್ತಿಯ ಪ್ರತಿಭಟನೆಯೇ ಕೇಂದ್ರ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ ಎಂದು ಅವರು ಬಣ್ಣಿಸಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ತಡೆಯಲು ಕಠಿಣ ಕಾಯ್ದೆಯ ಅಗತ್ಯವಿದೆ ಎಂದು ಒತ್ತಾಯಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !