ಹೊಸ ದಿಗಂತ ವರದಿ, ಮಂಗಳೂರು:
ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಹೈ ಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಧರ್ಮಸ್ಥಳ ಎಸ್ಐಟಿ ತನಿಖೆ ಪ್ರಕರಣದ ವರದಿ ಈ ತಿಂಗಳು ಸಿಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವರು ಆ ಬಗ್ಗೆ ಹೇಳಿಕೆ ನೀಡಿದ್ದಾರೆ. ನನಗೆ ತಿಳಿದಿಲ್ಲ ಎಂದರು.
ಕರಾವಳಿಗೆ ಪದೇ ಪದೇ ಭೇಟಿ ನೀಡುವ ಬಗ್ಗೆ ಯಾವುದೇ ಟಾರ್ಗೆಟ್ ಇಟ್ಟುಕೊಂಡಿಲ್ಲ. ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿದ್ದಾರೆ ಬಂದಿದ್ದೇನೆ ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಉತ್ತರಿಸಿದರು.
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಮೇಲೆ ಪ್ರಕರಣ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೇ ದ್ವೇಷ ಭಾಷಣ ಮಾಡಿದರೂ ಕೇಸು ದಾಖಲಾಗುತ್ತೆ. ದ್ವೇಷ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ ಎಂದು ಹೇಳಿದರು.

