ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ.
ಇದಕ್ಕಾಗಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವತ್ತಿರುವುದನ್ನು ಗಮನಿಸಬಹುದು.
ಒಪಿಎಸ್ಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ತೊಡಗಿರುವ ಪ್ರತಿಭಟನಾಕಾರರಿಗೆ ಬೆಂಬಲ ನೀಡಲು ಪಕ್ಷದ ಮುಖಂಡರೊಂದಿಗೆ ಫ್ರೀಡಂ ಪಾರ್ಕ್ಗೆ ತೆರಳಿದ ಎಎಪಿ ಉಪಾಧ್ಯಕ್ಷ ಭಾಸ್ಕರ್ ರಾವ್, ರಾಜ್ಯದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಕೂಡಲೇ ಎನ್ಪಿಎಸ್ ಅನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್, ”ಪಂಜಾಬ್ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಓಪಿಎಸ್ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು, ಅದರಂತೆ ನವೆಂಬರ್ ನಲ್ಲಿ ಅಲ್ಲಿನ ಕ್ಯಾಬಿನೆಟ್ ಒಪಿಎಸ್ ಜಾರಿಗೆ ಅನುಮೋದನೆ ನೀಡಿ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಗುಜರಾತಿನಲ್ಲೂ ಒಪಿಎಸ್ ಜಾರಿ ಬಗ್ಗೆ ಎಎಪಿ ಗ್ಯಾರಂಟಿ ನೀಡಿತ್ತು ಆದರೆ ಅಲ್ಲಿ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಓಪಿಎಸ್ ಜಾರಿಗೆ ಬದ್ಧರಾಗಿದ್ದೇವೆ. ಇದನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ನಮೂದಿಸುತ್ತೇವೆ. ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಎಎಪಿ ಯಾವಾಗಲೂ ಬದ್ಧವಾಗಿದೆ ಎಂದು ಅವರು ಹೇಳಿದರು. ಕೇಂದ್ರ ಮತ್ತು ಈಗಿನ ರಾಜ್ಯ ಸರ್ಕಾರಕ್ಕೆ ಜನಸಾಮಾನ್ಯರ ಅಗತ್ಯತೆಗಳು ಮುಖ್ಯವಲ್ಲ ಮತ್ತು ಅವರಿಗೆ ಬಂಡವಾಳಶಾಹಿ ಉದ್ಯಮಿಗಳೇ ಮುಖ್ಯ ಎಂದು ಎಎಪಿ ಮುಖಂಡ ಬ್ರಿಜೇಶ್ ಕಾಳಪ್ಪ ಆರೋಪಿಸಿದರು.
”ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರಕಾರಗಳಿಗೆ ಬಂಡವಾಳಶಾಹಿ ಉದ್ಯಮಿಗಳೇ ಮುಖ್ಯ, ಬಿಜೆಪಿ ಸರಕಾರಕ್ಕೆ ನೌಕರರು, ಕೂಲಿಕಾರರು, ರೈತರು, ಸಣ್ಣ ಉದ್ಯಮಿಗಳು ಸೇರಿದಂತೆ ಶ್ರೀಸಾಮಾನ್ಯರ ಅಗತ್ಯತೆಗಳು ಲೆಕ್ಕಕ್ಕಿಲ್ಲ, ಸಮಾಜದ ವಿವಿಧ ಸ್ತರದ ಜನರು ಇಷ್ಟು ದಿನ ಪ್ರತಿಭಟನೆ ನಡೆಸಿ ಈಗ ಸರ್ಕಾರಿ ನೌಕರರು ಬೀದಿಗಿಳಿದಿದ್ದಾರೆ. ಬಿಜೆಪಿ ನಾಯಕರಿಗೆ ಸರ್ಕಾರಿ ನೌಕರರ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಎನ್ಪಿಎಸ್ ರದ್ದು ಮಾಡಿ ಒಪಿಎಸ್ ಜಾರಿ ಮಾಡಲಿ’ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ