ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರವನ್ನು ಟೀಕಿಸಿ ಆದ್ರೆ ನಗರ ನಕ್ಸಲರಂತೆ ವರ್ತಿಸುವವರನ್ನು ಬಂಧಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ವಿಶೇಷ ಸಾರ್ವಜನಿಕ ಸುರಕ್ಷತಾ ಮಸೂದೆ- 2024’ ಅಡಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ ರಾಜ್ ಠಾಕ್ರೆ ಸವಾಲೆಸೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅವರು, ಸರ್ಕಾರವನ್ನು ಟೀಕಿಸುವವರ ವಿರುದ್ಧ ನೂತನ ಮಸೂದೆಯ ಮೂಲಕ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿದರು.
ಇತ್ತೀಚೆಗೆ ನಗರ ನಕ್ಸಲ್ ಸಿದ್ಧಾಂತ ಮತ್ತು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವ ಎಡ ಪಂಥೀಯ ಸಂಘಟನೆಗಳ ನಿಗ್ರಹಕ್ಕಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ವಿಶೇಷ ಸಾರ್ವಜನಿಕ ಸುರಕ್ಷತಾ ಮಸೂದೆ 2024’ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರಗೊಂಡಿತ್ತು. ಇದಕ್ಕೆ ವಿರೋಧ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.