ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಆದಾಯ ತೆರಿಗೆ ದಾಳಿಗಳ ಹಿನ್ನೆಲೆ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಭಯ ಹುಟ್ಟಿಸುವ ಪ್ರಯತ್ನ ಬೇಡ, ಧೈರ್ಯ ಇದ್ದರೆ ನೇರವಾಗಿ ಎದುರಿಸಿ” ಎಂದು ಸವಾಲು ಹಾಕಿದ್ದಾರೆ.
ಕೋಲ್ಕತಾದ ವಿವಿಧ ಪ್ರದೇಶಗಳಲ್ಲಿ ಹಾಗೂ ಟಿಎಂಸಿ ಅಭ್ಯರ್ಥಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ. ರಾಶ್ ಬೆಹಾರಿ ಕ್ಷೇತ್ರದ ಅಭ್ಯರ್ಥಿ ದೇಬಾಶಿಶ್ ಕುಮಾರ್ ಮತ್ತು ಭವಾನಿಪುರ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ನಿವಾಸಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:
ಇನ್ನೂ ಕೆಲವೇ ದಿನಗಳಲ್ಲಿ ನಡೆಯಲಿರುವ ಮತದಾನದ ಮೊದಲು ಇಂತಹ ಕ್ರಮ ಕೈಗೊಳ್ಳುವುದು ರಾಜಕೀಯ ಉದ್ದೇಶಪೂರಿತವಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಚುನಾವಣಾ ಪ್ರಕ್ರಿಯೆಗೂ ಮುನ್ನ ಪಕ್ಷದ ಅಭ್ಯರ್ಥಿಗಳನ್ನು ಬೆದರಿಸಲು ಈ ದಾಳಿಗಳನ್ನು ಬಳಸಲಾಗುತ್ತಿದೆ ಎಂಬುದು ಅವರ ವಾದ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, “ಇವು ಕಾನೂನು ಕ್ರಮಗಳಲ್ಲ, ರಾಜಕೀಯ ಪ್ರೇರಿತ ದೌರ್ಜನ್ಯ. ವಿರೋಧ ಪಕ್ಷದ ನಾಯಕರನ್ನು ಒತ್ತಡಕ್ಕೆ ಒಳಪಡಿಸಲು ಕೇಂದ್ರ ಸಂಸ್ಥೆಗಳನ್ನು ಬಳಸಲಾಗುತ್ತಿದೆ” ಎಂದು ಆರೋಪಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಸ್ವಾಯತ್ತ ಸಂಸ್ಥೆಗಳ ಸ್ವತಂತ್ರತೆ ಕಳೆದುಕೊಂಡಿದೆ ಎಂದು ಟೀಕಿಸಿದರು. ಜನರ ಬೆಂಬಲವಿರುವ ನಾಯಕತ್ವವನ್ನು ಇಂತಹ ಕ್ರಮಗಳಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.



