ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮಿತಿಮೀರಿದ್ದು, ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರ ನಡೆಸುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಎಂದರೆ ಕೇವಲ ಕಮಿಷನ್, ಭ್ರಷ್ಟಾಚಾರ ಮತ್ತು ಲೂಟಿ ಎಂದು ಮಾತ್ರ ನಾವು ತಿಳಿಯುತ್ತಿದ್ದೆವು. ಆದರೆ ಈಗಿನ ಬೆಳವಣಿಗೆಗಳನ್ನು ನೋಡಿದರೆ, ಕಾಂಗ್ರೆಸ್ ಅಮಾನವೀಯತೆಯ ಪರಮಾವಧಿಗೆ ತಲುಪಿದೆ. ಅಧಿಕಾರ ಕೈಯಲ್ಲಿದ್ದರೆ ಜನರೊಂದಿಗೆ ಹೇಗೆ ಬೇಕಾದರೂ ವರ್ತಿಸಬಹುದು ಎಂಬ ದುರ್ನಡತೆಯನ್ನು ಈ ಪಕ್ಷ ಮೈಗೂಡಿಸಿಕೊಂಡಿದೆ ಎಂದು ಕಿಡಿಕಾರಿದರು.
ಹೊರದೇಶದಿಂದ ಪ್ರವಾಸಕ್ಕೆ ಬಂದಿದ್ದ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಕಾಂಗ್ರೆಸ್ ಸಂಸದ ರಾಜಶೇಖರ ಹಿಟ್ನಾಳ್ ಅವರು ಇದನ್ನು ಅತ್ಯಂತ ಹಗುರವಾಗಿ “ಸಣ್ಣ ಘಟನೆ” ಎಂದು ಕರೆದಿರುವುದು ಅವರ ನೀಚ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಒಬ್ಬ ಮಹಿಳೆಯ ಮೇಲಿನ ದೌರ್ಜನ್ಯ ಮತ್ತು ಕೊಲೆಯನ್ನು ಕ್ಷುಲ್ಲಕವಾಗಿ ಕಾಣುವ ಇಂತಹ ಮನಸ್ಥಿತಿಗೆ ಜನರು ತಕ್ಕ ಪಾಠ ಕಲಿಸಬೇಕಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.



