ಹೊಸದಿಗಂತ ವರದಿ ಮಡಿಕೇರಿ:
ಗೋವು ಅಕ್ರಮ ಸಾಗಾಟದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡಗಿನಿಂದ ಗೋವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅರಕಲಗೂಡಿನ ಹೂಳಲುಗೋಡು ಗ್ರಾಮದ ದಿಲ್ ನವಾಜ್ ಅಲಿಯಾಸ್ ಶಾನವಾಜ್ ಹಾಗೂ ಸಯ್ಯದ್ ಗಫೂರ್ ಎಂಬವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ.
ಇತ್ತೀಚೆಗೆ ಸೋಮವಾರಪೇಟೆಯಿಂದ ಗೋವು ಸಾಗಾಟ ಮಾಡುತ್ತಿದ್ದ ವೇಳೆ ಕಾಗಡಿಕಟ್ಟೆ ಬಳಿ ಗೋವುಗಳಿದ್ದ ವಾಹನ ಅಪಘಾತಕ್ಕೀಡಾಗಿ ಮಗುಚಿಕೊಂಡಿತ್ತು. ನಂತರ ಬೆಂಗಾವಲು ಇನೋವಾ ಕಾರಿನಲ್ಲಿ ಮೂವರು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇತ್ತೀಚೆಗೆ ಗೋವುಗಳ ಕಳ್ಳಸಾಗಾಣೆ, ಗೋ ಮಾಂಸ ಮಾರಾಟ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸೋಮವಾರಪೇಟೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.