ಹೊಸ ದಿಗಂತ ವರದಿ, ರಾಮನಗರ:
ರಾಜ್ಯದಲ್ಲಿ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಚಿಕ್ಕಬಳ್ಳಾಪುರದ ಗಣಿಯಲ್ಲಿ ಜಿಲೆಟಿನ್ ಸ್ಫೋಟಕ್ಕೆ ಸರ್ಕಾರದ ಬೇಜವಾಬ್ದಾರಿತನ, ಅಧಿಕಾರಿಗಳ ಪ್ರೋತ್ಸಾಹವೇ ಕಾರಣ. ಸರ್ಕಾರದಲ್ಲಿ ಜನರ ಜೀವದ ಬಗ್ಗೆ ಕಮಿಟ್ಮೆಂಟ್ ಇಲ್ಲ. ಮಂತ್ರಿಗಳು ಪ್ರಕರಣ ನಡೆದಾಗ ಮಾತ್ರ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡುತ್ತಾರೆ’ ಎಂದು ದೂರಿದರು.
ಒಂದು ವಾರದ ಮುಂಚೆಯೇ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಆದರೂ ಈ ಘಟನೆ ನಡೆದಿದ್ದು, ಅವರಿಗೆ ಮೊದಲೇ ಮಾಹಿತಿ ಇತ್ತು ಎನಿಸುತ್ತದೆ’ ಎಂದರು.
ಮೈತ್ರಿ ಸರ್ಕಾರದಲ್ಲಿ ಕಾವೇರಿ ಕಣಿವೆ ಪ್ರದೇಶದ ಯೋಜನೆಗಳಿಗೆ 6 ಸಾವಿರ ಕೋಟಿ ಮೀಸಲಿಟ್ಟಿದ್ದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಹಿಂಪಡೆಯಿತು.ಈಗ ತಮಿಳುನಾಡಿವರು ಕೇಂದ್ರದಿಂದ ಆರು ಸಾವಿರ ಕೋಟಿ ಹಣ ಪಡೆದು ತಮ್ಮಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ರೂಪಿಸುತ್ತಿದ್ದಾರೆ. ಇದರಿಂದಲೇ ರಾಜ್ಯ ಬಿಜೆಪಿ ಸರ್ಕಾರದ ನಡೆ ಗೊತ್ತಾಗಲಿದೆ ಎಂದು ದೂರಿದರು.