ಹೊಸದಿಗಂತ ವರದಿ, ಕುಶಾಲನಗರ
ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ಖಾಸಗಿ ವ್ಯಕ್ತಿಯ ಕುಟುಂಬದವರು ವಾಸಿಸುತ್ತಿರುವುದನ್ನು ಖುದ್ದಾಗಿ ಪರಿಶೀಲಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆ ಕುಟುಂಬವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಸಮೀಪ ಗಂಗೆ ಕಲ್ಯಾಣ ಗ್ರಾಮದಲ್ಲಿರುವ ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ಕಳೆದ 30 ವರ್ಷಗಳ ಹಿಂದೆ ಪರಿಶಿಷ್ಟ ಪಂಗಡದವರಿಗೆ ರೇಷ್ಮೆ ಇಲಾಖೆಯ ವತಿಯಿಂದ ಚಾಕಿ ಸಾಕಣೆ ಕೇಂದ್ರವನ್ನು ತೆರಯಲಾಗಿತ್ತು ಆದರೆ ಅಲ್ಲಿ ರೇಷ್ಮೆ ಇಲಾಖೆಯ ಕಾರ್ಯ ಸ್ಥಗಿತಗೊಂಡಿದ್ದು, ಈ ಕಟ್ಟಡದ ಒಂದು ಭಾಗದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದರೆ, ಇನ್ನೊಂದು ಭಾಗದಲ್ಲಿ ಖಾಸಗಿ ವ್ಯಕ್ತಿಯ ಕುಟುಂಬದವರು ವಾಸಿಸುತ್ತಿದ್ದರು.
ಶಾಸಕ ಅಪ್ಪಚ್ಚು ರಂಜನ್ ಅವರು ಸೀಗೆಹೊಸೂರು ಗ್ರಾಮದ ವಿವಿಧ ಕಾಮಗಾರಿಗಳ ಭೂಮಿ ಪೂಜೆಗೆ ಅಗಮಿಸಿದ ಸಂದರ್ಭದಲ್ಲಿ ಈ ವಿಚಾರವನ್ನು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು.
ಗ್ರಾಮಸ್ಥರ ಸಮ್ಮುಖದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಇದು ಗಿರಿಜನ ಸಮುದಾಯದ ಜಾಗವಾಗಿರುವುದರಿಂದ, ಮತ್ತು ಈ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪರಿಶಿಷ್ಟ ಪಂಗಡ ಕುಟುಂಬದವರು ಇರುವುದರಿಂದ ಸಮುದಾಯದ ಕುಟುಂಬದವರಿಗೆ ಅನುಕೂಲವಾಗುವಂತೆ ಒಂದು ಸಮುದಾಯದ ಭವನ ನಿರ್ಮಾಣ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಯ ಕುಟುಂಬದವರನ್ನು ತೆರವುಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತಿ ಅಧಿಕಾರಿ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತ್, ಗಿರೀಶ್, ಚಂದ್ರು ಜಯಶೀಲಾ ಜಯಶ್ರೀ, ಪ್ರಮುಖರಾದ ರಾಮಕೃಷ್ಣ, ನಾಗರಾಜ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಮಂಜಯ್ಯ, ಗೌರಮ್ಮ, ರಾಜು, ರಾಮಣ್ಣ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ