ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ವರ್ಷ ಪದವಿ, ಡಿಪ್ಲೊಮಾ ಮುಗಿಸಿದ ಇನ್ನು ಆರು ತಿಂಗಳೊಳಗೆ ಕೆಲಸ ಸಿಗದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎರಡು ದಿನಗಳ ರಾಜ್ಯ ವಕೀಲರ ಸಮ್ಮೇಳನಕ್ಕೆ ಆಗಮಿಸಿದ್ದ ವೇಳೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪದವಿ ಗಳಿಸಿದ ನಿರುದ್ಯೋಗ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯಡಿ ತಿಂಗಳಿಗೆ 3 ಸಾವಿರ ಮತ್ತು ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ ಒಂದೂವರೆ ಸಾವಿರ ರೂ.ಗಳನ್ನು ನೀಡುವ ಯೋಜನೆ ಇದಾಗಿದೆ. ಡಿಸೆಂಬರ್, ಜನವರಿಯೊಳಗೆ ಯುವನಿಧಿ ಯೋಜನೆ ಜಾರಿಗೆ ಬರುತ್ತದೆ ಎಂದರು.
ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು ಎಂದರು.