ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ ‘ಯುವನಿಧಿ’ ಯೋಜನೆಯನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳ ವರೆಗೆ ಉದ್ಯೋಗ ಸಿಗದ ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3,000 ರೂ.ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ನೀಡುವ ಮೂಲಕ ನಿರುದ್ಯೋಗದ ಹತಾಶ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಹೊರತಂದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಹುಡುಕಿಕೊಳ್ಳಲು ಇನ್ನಷ್ಟು ಸಮಯಾವಕಾಶ ಕಲ್ಪಿಸಿಕೊಡುತ್ತಿದ್ದೇವೆ ಎಂದು ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ.
ನಿರುದ್ಯೋಗ ಭತ್ಯೆ ನೀಡುವುದಷ್ಟೇ ಅಲ್ಲ ಇದರ ಜೊತೆಗೆ ಲಭ್ಯವಿರುವ ಎಲ್ಲಾ ಅವಕಾಶಗಳು ಹಾಗೂ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗ ಸೃಷ್ಟಿಸಲು ಗರಿಷ್ಠ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ನಮ್ಮ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಸಿಎಂ ತಿಳಿಸಿದ್ದಾರೆ.