ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಅಂಗಡಿ ಮಾಲಕರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.
ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆಯೊಳಗೆ ಮುಚ್ಚಬೇಕು. ಆ.1ರವರಗೆ ಈ ಆದೇಶ ಜಾರಿಯಲ್ಲಿರಲಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಎಂದವರು ತಿಳಿಸಿದ್ದಾರೆ.
ನಾಳೆ ಶಾಂತಿ ಸಭೆ
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.