ರಾಜ್ಯದಲ್ಲಿ ನಾಳೆಯಿಂದ ಶಾಲೆಗಳು ಆರಂಭ: ಮಧ್ಯಾಹ್ನ ಇರಲಿದೆ ಬಿಸಿಯೂಟ ಎಂದ ಸಚಿವ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ನಾಳೆಯಿಂದ ಶಾಲೆಗಳು ಆರಂಭವಾಗಲಿದ್ದು, ಹೀಗಾಗಿ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.
ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಮೇ.16ರ ನಾಳೆಯ ಸೋಮವಾರದಿಂದ ರಾಜ್ಯದಾದ್ಯಂತ ಶಾಲೆಗಳು ಆರಂಭವಾಗುತ್ತವೆ. ಸೋಮವಾರ ಮಧ್ಯಾಹ್ನ 12.30ಕ್ಕೆ ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಲಿಕಾ ಚೇತರಿಕೆ, 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಉಂಟಾಗಿರುವ ಹಿನ್ನಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಂಬಂಧ ಶಿಕ್ಷಕರಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ. ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಇನ್ನು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಆರಂಭಿಸಲಾಗುತ್ತದೆ. ಕರ್ನಾಟಕ ಸಾರಿಗೆ ನಿಗಮದ ಬಸ್‌ಗಳಲ್ಲಿ ಶಾಲೆಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಪಾಸ್ ಪಡೆಯುವವರೆಗೆ ಹಿಂದಿನ ವರ್ಷ ವಿತರಿಸಲಾಗಿರುವ ವಿದ್ಯಾರ್ಥಿ ಪಾಸ್‌ಗಳನ್ನು ಪರಿಗಣಿಸಲು ಸಾರಿಗೆ ನಿಗಮದಿಂದ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!