ಮೀಸಲಾತಿ ಹೆಚ್ಚಳ: ಸಿಎಂ ಬೊಮ್ಮಾಯಿ, ಸಚಿವ ಸಂಪುಟಕ್ಕೆ ಕಟೀಲ್‌ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಮೀಸಲಾತಿ ಹೆಚ್ಚಿಸುವ ಮೂಲಕ ಬಿಜೆಪಿ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ ಎಂದರು.

ಬೇರೆ ರಾಜಕೀಯ ಪಕ್ಷಗಳಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಎಲ್ಲರೂ ಇದನ್ನು ಮುಂದಕ್ಕೆ ಹಾಕುತ್ತಾ ಬಂದರು. ಪ್ರಸ್ತುತ ಜನಸಂಖ್ಯೆ ಆಧಾರದಡಿ ಮೀಸಲಾತಿ ನಿರ್ಧಾರ ಆಗಬೇಕಿದೆ. 1950ರಲ್ಲಿ ಮಾಡಿದ ಜನಗಣತಿ ಆಧಾರದಲ್ಲಿ ಮೀಸಲಾತಿ ಪ್ರಮಾಣ ನಿಗದಿಪಡಿಸಲಾಗಿತ್ತು. ಅದರ ಸ್ಥೂಲ ಮಾರ್ಪಾಡಿನೊಂದಿಗೆ ಪ್ರಸ್ತುತ ಇರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕ ಬಿಜೆಪಿ ಸರಕಾರ ತೆಗೆದುಕೊಂಡಿದೆ ಎಂದು ಮೆಚ್ಚುಗೆ ಸೂಚಿಸಿದರು.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದ ಜ್ವಲಂತ ಸಮಸ್ಯೆ ಬಗೆಹರಿದಿದೆ. ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನ ಅನ್ವಯ ರಾಜ್ಯ ಸರಕಾರವು ಇದಕ್ಕೆ ಒಪ್ಪಿಗೆ ಕೊಟ್ಟು ಜಾರಿಗೆ ತರುವ ಪ್ರಯತ್ನದಲ್ಲಿದೆ. ಹಿಂದೆ ಕುಲದೀಪ್ ಸಿಂಗ್ ಆಯೋಗದ ಶಿಫಾರಸಿನಡಿ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಪ್ರತಿಯೊಂದು ಸಮಾಜವನ್ನು ಮೇಲಕ್ಕೆ ತರುವುದರಲ್ಲಿ ನಂಬಿಕೆ ಇಟ್ಟ ಪಕ್ಷ ಬಿಜೆಪಿ.

ಬೇರೆ ಬೇರೆ ರಾಜ್ಯಗಳಲ್ಲಿ ಇಂಥ ಸಮಸ್ಯೆ ಕಾಣಿಸಿಕೊಂಡಾಗ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಸ್ಟಿಸ್ ರೋಹಿಣಿ ಆಯೋಗವನ್ನು ನೇಮಿಸಿದೆ. ಈ ಆಯೋಗದ ಶಿಫಾರಸು ಲಭಿಸಿದ ಬಳಿಕ ಮಿಕ್ಕ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆದರಣೀಯ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಹುದಿನಗಳ ಬೇಡಿಕೆ, ಆಗ್ರಹ ಈಡೇರಿಸುವ ವಿಜಯದಶಮಿಯ ದೊಡ್ಡದಾದ ಉಡುಗೊರೆ ಇದು ಎಂದು ಕಟೀಲ್ ಸಂತಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!