ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯದಲ್ಲಿ ಕೋವಿಡ್ ಬಾಧಿತರ ಸಂಖ್ಯೆ ಸತತವಾಗಿ ಹೆಚ್ಚಳವಾಗುತ್ತಿದ್ದು, ಸರ್ಕಾರದ ನಿದ್ದೆಗೆಡಿಸಿದೆ.
ಸೋಂಕು ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ, ಶೀತ, ಕೆಮ್ಮು, ಗಂಟಲು ನೋವು ಮತ್ತು ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಇರುವವರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದೆ.
ಇನ್ನು ವೃದ್ಧರು, ಗರ್ಭಿಣಿಯರು ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರಯಾಣ ಮಾಡುವಾಗ ಮಾಸ್ಕ್ ಧರಿಸುವುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ. ಇದಲ್ಲದೆ ರೋಗಲಕ್ಷಣಗಳು ಇರುವವರು ಕೋವಿಡ್ ಪರೀಕ್ಷೆಗೆ ಒಳಗಾಗಲು ಕೂಡಾ ಸೂಚಿಸಲಾಗಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಕ್ಷಿಪ್ರ ಪ್ರತಿಕ್ರಿಯೆ ತಂಡ ಸಭೆ ನಡೆಸಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದೆ. ಪ್ರಸ್ತುತ, ಕೇರಳದಲ್ಲಿ 430 ಸಕ್ರಿಯ ಪ್ರಕರಣಗಳಿದ್ದು, ತಿರುವನಂತಪುರಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕಿತರು ಕಂಡುಬಂದಿದ್ದಾರೆ. ಕೋವಿಡ್ನಿಂದ ಇದುವರೆಗೆ ಎರಡು ಮಂದಿ ಸಾವನ್ನಪ್ಪಿದ್ದಾರೆ.