ಹೊಸದಿಗಂತ ವರದಿ, ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋವುಗಳ ಕಳ್ಳತನ, ಸಾಗಾಟ ಮತ್ತು ವಧೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು ಗೋವುಗಳ ಮೇಲಿನ ಕ್ರೌರ್ಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಲವು ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಎಂ.ನಾರಾಯಣ
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದಲ್ಲಿ ನಡೆದ ಗೋವು ಕಳ್ಳತನ ಮತ್ತು ವಧೆಯ ಘಟನೆಯನ್ನು ಪೊಲೀಸ್ ಇಲಾಖೆ ವತಿಯಿಂದ ಖಂಡಿಸಿ ಸರ್ಕಾರದ ನಿರ್ದೇಶನದಂತೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿತರ ಪತ್ತೆಗೆ 6 ಪ್ರತ್ಯೇಕ ತಂಡಗಳನ್ನು ರಚಿಸಿ ಆರೋಪಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅವರು ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ 138 ಅಕ್ರಮ ಗೋವುಗಳ ಸಾಗಾಟದ ಪ್ರಕರಣ ದಾಖಲಿಸಿ 866 ಗೋವುಗಳ ರಕ್ಷಣೆ ಮಾಡಲಾಗಿದೆ . ಅದೇ ರೀತಿ ಗೋವುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 23 ಪ್ರಕರಣಗಳನ್ನು ದಾಖಲಿಸಿ 34 ಗೋವುಗಳ ರಕ್ಷಣೆ ಮಾಡಲಾಗಿದೆ.
ಅಕ್ರಮ ಗೋವುಗಳ ಸಾಗಾಟ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ 467 ಆರೋಪಿಗಳನ್ನು ದಸ್ತಗಿರಿ ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ ಗೋವುಗಳ ಕಳ್ಳತನ ಮತ್ತು ಸಾಗಾಟ ತಡೆಯುವ ದಿಶೆಯಲ್ಲಿ ಪೊಲೀಸ್ ಹೆಚ್ಚಿನ ಚೆಕ್ ಪೋಸ್ಟ್ ಗಳನ್ನು ತೆಗೆದು ಗಸ್ತು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಗೋವುಗಳ ಸಾಗಾಟ ಮತ್ತು ಕಳ್ಳತನದ ಮಾಹಿತಿ ಇದ್ದರೆ ಸಾರ್ವಜನಿಕರು ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠರ ದೂರವಾಣಿ ಸಂಖ್ಯೆ 9480805201 ಗೆ ಸಂಪರ್ಕಿಸಿ ತಿಳಿಸಬಹುದಾಗಿದ್ದು ಕರೆ ಮಾಡಿದವರ ಕುರಿತು ಗೌಪ್ಯತೆ ಕಾಯ್ದುಕೊಂಡು ಪೊಲೀಸ್ ಕಾರ್ಯಾಚರಣೆ ನಡೆಸಿ ಆರೋಪಿತರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.