ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಈ ನಡುವೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ಗೆ ವ್ಯಕ್ತಿಯೋರ್ವರು ಬಲಿಯಾಗಿರುವುದು ಈ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ದಕ್ಷಿಣ ಕನ್ನಡದ ಆರೋಗ್ಯ ಇಲಾಖೆ ಅಲರ್ಟ್
ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸುದ್ದಿಯ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಎಲ್ಲಾ ತಾಲೂಕಿನ ಸಭೆಗಳನ್ನು ನಡೆಸಲಾಗುತ್ತಿದ್ದು, ವೈರಸ್ಗೆ ಕಡಿವಾಣ ಹಾಕಲು ಅಗತ್ಯ ಸಲಹೆ ಸೂಚನೆಗಳನ್ನು ವೈದ್ಯರುಗಳಿಗೆ ನೀಡಲಾಗುತ್ತಿದೆ.
ಕೇರಳ ಗಡಿಗೆ ಹೊಂದಿಕೊಂಡ ಸ್ಥಳಗಳಲ್ಲಿ ನಿಗಾ
ಕೇರಳ ಗಡಿಗೆ ಹೊಂದಿಕೊಂಡ ತಾಲೂಕುಗಳಾದ ಸುಳ್ಯ, ಪುತ್ತೂರು, ಉಳ್ಳಾಲ ಮೊದಲಾದ ಕಡೆಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ. ರೋಗಗಳ ಬಗ್ಗೆ ವ್ಯಾಪಕ ಎಚ್ಚರಿಕೆ ವಹಿಸುವಂತೆ ಹಾಗೂ ಕೋವಿಡ್ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳ ಮೇಲೆ ವಿಶೇಷ ನಿಗಾ ಇರಿಸಲು ಸಭೆಯಲ್ಲಿ ಸೂಚಿಸಲಾಗಿದೆ. ಗಡಿ ಭಾಗಗಳಲ್ಲಿ ಕೂಡಾ ಈಗ ವ್ಯಾಪಕ ಎಚ್ಚರಿಕೆ ಕೈಗೊಳ್ಳಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ