March 23, 2026
Monday, March 23, 2026
spot_img

India vs New Zealand, 3rd ODI | ಇಂದೋರ್‌ನಲ್ಲಿ ಸರಣಿ ತೀರ್ಮಾನ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯಕ್ಕೆ ಇಂದು ವೇದಿಕೆ ಸಜ್ಜಾಗಿದೆ. ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಮಾಡಲು ತೀರ್ಮಾನಿಸಿದ್ದಾರೆ. ಸರಣಿ 1–1 ಸಮಬಲದಲ್ಲಿರುವ ಹಿನ್ನೆಲೆಯಲ್ಲಿ, ಇಂದಿನ ಪಂದ್ಯವೇ ಟ್ರೋಫಿ ಯಾರ ಕೈ ಸೇರಲಿದೆ ಎಂಬುದನ್ನು ತೀರ್ಮಾನಿಸಲಿದೆ.

ಈ ಮಹತ್ವದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆಡಿದ್ದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ, ಬ್ಯಾಟಿಂಗ್ ಮತ್ತು ಆಲ್‌ರೌಂಡ್ ವಿಭಾಗದಲ್ಲಿ ಭಾರತ ತನ್ನ ವಿಶ್ವಾಸಾರ್ಹ ಸಂಯೋಜನೆಯನ್ನು ಮುಂದುವರಿಸಿದೆ.

ಭಾರತದ ಪ್ಲೇಯಿಂಗ್ ಇಲೆವೆನ್‌ನಲ್ಲಿ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಸೇರಿದ್ದಾರೆ. ನ್ಯೂಜಿಲೆಂಡ್ ತಂಡವೂ ಅನುಭವ ಮತ್ತು ಯುವಶಕ್ತಿಯ ಸಮತೋಲನದೊಂದಿಗೆ ಕಣಕ್ಕಿಳಿದಿದೆ.

ಮೊದಲ ಪಂದ್ಯವನ್ನು ಭಾರತ ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಿರುಗೇಟು ನೀಡಿತ್ತು. ಹೀಗಾಗಿ ಇಂದು ಗೆಲ್ಲುವ ತಂಡ 2–1 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಅಭಿಮಾನಿಗಳು ಈ ‘ಫೈನಲ್ ಫೈಟ್’ನಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !