ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ವಾಯು ಕಮಾಂಡ್ಗೆ ಸೇರಿದ ಹೆಲಿಕಾಪ್ಟರ್ಗಳು ಕಳೆದ 48 ಗಂಟೆಗಳಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ರಕ್ಷಣಾ ಕಾರ್ಯ ನಡೆಸಿದ್ದು, ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 780ಕ್ಕೂ ಹೆಚ್ಚು ನಾಗರಿಕರನ್ನು ರಕ್ಷಿಸಿದ್ದಾರೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಂಗ್ರಾ ಜಿಲ್ಲೆಯ ಫತೇಪುರ್ ನಲ್ಲಿ ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಕುರಿತು ಮಾತನಾಡಿದ ಕಂಗ್ರಾದ ಡೆಪ್ಯುಟಿ ಕಮಿಷನರ್ ನಿಪುನ್ ಜಿಂದಾಲ್ ಅವರು, ಆಗಸ್ಟ್ 15 ರಿಂದ ಒಟ್ಟು 800 ನಾಗರಿಕರನ್ನು ರಕ್ಷಿಸಲಾಗಿದೆ. ಎನ್ಡಿಆರ್ಎಫ್, ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯಿಂದ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದೆ. ಇದುವರೆಗೆ ರಕ್ಷಿಸಲ್ಪಟ್ಟವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರಿಗಾಗಿ ಪರಿಹಾರ ಶಿಬಿರಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಬುಧವಾರದಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕಾಂಗ್ರಾ ಜಿಲ್ಲೆಯ ಇಂದೋರಾ ಮತ್ತು ಫತೇಪುರ್ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಪಾಂಗ್ ಜಲಾಶಯದ ಕೆಳಭಾಗದ ಪ್ರವಾಹದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು. ದಮ್ಟಾಲ್ ಮತ್ತು ಶೇಖ್ಪುರದಲ್ಲಿ ಪರಿಹಾರ ಶಿಬಿರಗಳಲ್ಲಿ ಜನರೊಂದಿಗೆ ಸಂವಾದ ನಡೆಸಿದ ಸಿಎಂ, ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಅವರಿಗೆ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಆಗಿರುವ ಜೀವಹಾನಿ ಮತ್ತು ವಸ್ತು ಹಾನಿಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.
ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಅಪಾರ ಹಾನಿಯಾಗಿದೆ.
ಹಲವಾರು ಸ್ಥಳೀಯರ ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವುದನ್ನು ಅಸಹಾಯಕತೆಯಿಂದ ನಾವು ಗಮನಿಸಿದ್ದೇವೆ. ಕೊಯ್ಲಿನ ವಿಶಾಲವಾದ ಪ್ರದೇಶಗಳು ಜಲಾವೃತಗೊಂಡಿವೆ. ಇದು ರೈತರಿಗೆ ಹೇಳಲಾಗದ ನಷ್ಟಕ್ಕೆ ಕಾರಣವಾಗಿದೆ ಎಂದು ಸಿಎಂ ಸುಖು ಅವರು ಬೇಸರ ವ್ಯಕ್ತಪಡಿಸಿದರು.
ಆಗಸ್ಟ್ 13 ರಿಂದ15ರ ವರೆಗಿನ ನಿರಂತರ ಮಳೆಯಿಂದಾಗಿ ಇಲ್ಲಿಯವರೆಗೆ ಒಟ್ಟು 71 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ಮಾನ್ಸೂನ್ನಿಂದಾಗಿ ರಾಜ್ಯಕ್ಕೆ ಸುಮಾರು 7,500 ಕೋಟಿ ನಷ್ಟ ಉಂಟು ಮಾಡಿದೆ ಎಂದು ಅಂದಾಜಿಸಲಾಗಿದೆ ಎಂದು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ಮಾಹಿತಿ ನೀಡಿದರು.