ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳ ಯಶಸ್ಸಿಗೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪಂದ್ಯಗಳನ್ನು ವ್ಯವಸ್ಥಿತವಾಗಿ ನಡೆಸಲು ವಿಶೇಷ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
“ಹೊಸದಾಗಿ ಪ್ರಯೋಗಗಳನ್ನೇನು ಮಾಡುವುದಿಲ್ಲ, ಆದರೆ ಪ್ರೇಕ್ಷಕರ ಸುರಕ್ಷತೆಯೇ ನಮಗೆ ಅತಿ ಮುಖ್ಯ” ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಪಂದ್ಯಗಳ ಸುಸೂತ್ರ ನಿರ್ವಹಣೆಗಾಗಿ ಗೃಹ ಸಚಿವರು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೆಎಸ್ಸಿಎ ಮತ್ತು ಆರ್ಸಿಬಿ ಮಂಡಳಿ ಸದಸ್ಯರನ್ನೊಳಗೊಂಡ ಸಮಿತಿ ಈಗಾಗಲೇ ಚರ್ಚೆ ನಡೆಸಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ಆಯೋಜಿಸಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಆದರೆ, ಜನದಟ್ಟಣೆ ನಿಯಂತ್ರಿಸಲು ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನರು ಸೇರಬಾರದು ಎಂಬ ಕಟ್ಟುನಿಟ್ಟಿನ ಷರತ್ತನ್ನು ವಿಧಿಸಲಾಗಿದೆ.



