ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಇಂದು ಕೆಂಪು ಬಣ್ಣದಿಂದ ಕಂಗೊಳಿಸಲಿದೆ. ಬರೋಬ್ಬರಿ 18 ವರ್ಷ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನೆ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಭಾರೀ ಬಿಗಿ ಭದ್ರತೆ ಮಾಡಲಾಗಿದೆ.
ಕಳೆದ ವರ್ಷವಷ್ಟೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಅನಾಹುತ ಸಂಭವಿಸಿ, 11 ಮಂದಿ ಜೀವ ಕಳೆದುಕೊಂಡಿದ್ದರು. ಇದೀಗ ಮತ್ತೆ ಈ ರೀತಿಯ ಯಾವ ಕೆಟ್ಟ ಘಟನೆಯೂ ನಡೆಯದಂತೆ ಪೊಲೀಸರು ನಿಗಾ ವಹಿಸಿದ್ದಾರೆ. ಇಂದು ಮೊದಲ ಪಂದ್ಯದಲ್ಲಿ ಆರ್ಸಿಬಿ vs ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಟೂರ್ನಿ ಇದಾಗಿರುವುದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭದ್ರತೆಗೆ 2,000 ಪೊಲೀಸರನ್ನ ನಿಯೋಜಿಸಲಾಗಿದೆ. ಈ ಪೈಕಿ 7 ಸ್ಪೆಷಲ್ ಸ್ಕ್ವಾಡ್ಗಳನ್ನ ಮಾಡಲಾಗಿದೆ.
ಈ ಬಾರಿ ಟೂರ್ನಿ 2 ತಿಂಗಳಿಗೂ ಹೆಚ್ಚು ಕಾಲ ಇರಲಿದ್ದು, ಮೇ 24ರವರೆಗೂ ಲೀಗ್ ಹಂತದ ಪಂದ್ಯಗಳು ನಡೆಯಲಿದೆ. ಮೇ 31 ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ. ಟ್ರೋಫಿಗಾಗಿ ಈ ಬಾರಿಯೂ 10 ತಂಡಗಳು ಸೆಣಸಲಿದ್ದು, ಟೂರ್ನಿಯಲ್ಲಿ ಒಟ್ಟು 65 ದಿನಗಳ ಕಾಲ 74 ಪಂದ್ಯಗಳು ನಡೆಯಲಿವೆ.



