ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ. ಎನ್. ಅನುಚೇತ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು.
ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವಜನಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರದಲ್ಲಿಯೂ ಇರಿಸಿ ಆದೇಶ ಹೊರಡಿಸಲಾಗಿದೆ.
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.



