ಹೊಸ ದಿಗಂತ ವರದಿ, ಮಡಿಕೇರಿ:
ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಯಾವುದೇ ಸಂದರ್ಭ ಉರುಳುವ ಸಾಧ್ಯತೆ ಇದ್ದು, ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ಶನಿವಾರಸಂತೆ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ
ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕೋಟಾ ಎಂದು ಕಾಂಗ್ರೆಸ್ ವಿಂಗಡಣೆ ಮಾಡಿದೆ. ಅದರಂತೆ ಈಗಾಗಲೇ ಅನೇಕ ಶಾಸಕರು ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಈ ಎರಡು ಕೋಟಾದಡಿ ಯಾವ ಶಾಸಕರು ಬೇಕಾದರೂ ಸಚಿವರಾಗಬಹುದು ಎಂದು ಅವರು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ
ಸ್ವತಃ ಭ್ರಷ್ಟಾಚಾರಿಯಾಗಿರುವ ಡಿ.ಕೆ.ಶಿವಕುಮಾರ್ ಅವರ ಬಾಯಿಯಲ್ಲಿ ರೌಡಿಗಳನ್ನು ಮಟ್ಟ ಹಾಕುವ ಹೇಳಿಕೆ ಬಂದಿರುವುದು ಅಚ್ಚರಿ ಮೂಡಿಸಿದೆ ಎಂದ ಅವರು, ರಾಜ್ಯದ ಬೊಕ್ಕಸ ಬರಿದಾಗಿದ್ದು, ಈ ಸರಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು.



