ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಜಾಕ್ವೆಲಿನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಆರೋಪ ರೂಪಿಸಲು ಅನುಮತಿ ನೀಡಿದ್ದು, ಜೂನ್ 3ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
‘ಬಲಿಪಶು’ ವಾದಕ್ಕೆ ಸಿಗಲಿಲ್ಲ ಬೆಂಬಲ
ಪ್ರಕರಣದಲ್ಲಿ ತಾವು ವಂಚನೆಯ ಬಲಿಪಶುವಾಗಿದ್ದೇವೆ ಎಂಬ ಜಾಕ್ವೆಲಿನ್ ಅವರ ವಾದವನ್ನು ನ್ಯಾಯಾಲಯ ಒಪ್ಪಿಲ್ಲ. ತನಿಖಾ ದಾಖಲೆಗಳಲ್ಲಿ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಆರೋಪಿಗಳ ವಿರುದ್ಧ ವಿಚಾರಣೆ ನಡೆಸಲು ಸಾಕಷ್ಟು ಆಧಾರಗಳಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಉಡುಗೊರೆಗಳೇ ತನಿಖೆಯ ಕೇಂದ್ರಬಿಂದು
ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ನಿರಂತರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳು, ಆರ್ಥಿಕ ನೆರವು ಹಾಗೂ ಐಷಾರಾಮಿ ಸೌಲಭ್ಯಗಳನ್ನು ಪಡೆದಿರುವ ಆರೋಪವೂ ತನಿಖೆಯಲ್ಲಿ ಪ್ರಮುಖ ವಿಷಯವಾಗಿ ಹೊರಹೊಮ್ಮಿದೆ.
ಇದನ್ನೂ ಓದಿ:
ಅಪ್ರೂವರ್ ಅರ್ಜಿಗೆ ಹಿನ್ನಡೆ
ಪ್ರಕರಣದಲ್ಲಿ ಅಪ್ರೂವರ್ ಆಗಲು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ನ್ಯಾಯಾಲಯ ಅವಕಾಶ ನೀಡಿದರೂ, ಜಾರಿ ನಿರ್ದೇಶನಾಲಯ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿಯೊಂದಿಗೆ ನೇರ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ವಿಶೇಷ ಸಡಿಲಿಕೆ ನೀಡಬಾರದು ಎಂದು ಇಡಿ ವಾದಿಸಿತ್ತು.
ಬಹುಕೋಟಿ ವಂಚನೆಯ ಹಿಂದೆ ಸುಕೇಶ್
ಈ ಪ್ರಕರಣದ ಕೇಂದ್ರಬಿಂದುವಾಗಿರುವ ಸುಕೇಶ್ ಚಂದ್ರಶೇಖರ್ ಹಲವು ಪ್ರಭಾವಿ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಕರೆಗಳನ್ನು ಮಾಡಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ. ಇದೇ ಅಕ್ರಮ ಹಣದ ಒಂದು ಭಾಗವನ್ನು ಜಾಕ್ವೆಲಿನ್ ಹಾಗೂ ಅವರ ಕುಟುಂಬದ ಮೇಲೆ ಖರ್ಚು ಮಾಡಲಾಗಿದೆ ಎಂಬ ಆರೋಪ ತನಿಖೆಯಲ್ಲಿ ಪ್ರಮುಖ ಅಂಶವಾಗಿ ಉಳಿದಿದೆ.



