ಹೊಸದಿಗಂತ ವರದಿ, ಕಲಬುರಗಿ:
ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸೋಲು ನೂರಕ್ಕೆ ನೂರು ಖಚಿತ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಕ್ಕಿಲ್ಲವೆಂದು ನಮ್ಮ ಸೈದಾಂತಿಕ ಕಡುವೈರಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಬಿಜೆಪಿಯ ವರಿಷ್ಠರಿಗೆ, ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಆದರಿಂದ, ಈ ಬಾರಿಯ ಚುನಾವಣೆಯಲ್ಲಿ ಅವರ ಸೋಲು ಕಟ್ಟಿಟ್ಟಬುತ್ತಿ ಎಂದರು.
ಹುಬ್ಬಳ್ಳಿ ಈದ್ಗ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುವಾಗ, ಟಿಪ್ಪು ಜಯಂತಿ ಆಚರಣೆ ಮಾಡುವ ವಿರೋಧಿಸಿದ ನೀವು ಈಗ ಕಾಂಗ್ರೆಸ್ ಬಗ್ಗೆ ಏನು ಹೇಳುತ್ತೀರಿ ? ಕನ್ನಡ ವಿರೋಧಿ, ಧರ್ಮ ವಿರೋಧಿ, ಗೋಹತ್ಯೆ ಪರವಾಗಿರುವ ಕಾಂಗ್ರೆಸ್ ಬಗ್ಗೆ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ರವಿಕುಮಾರ್ ಖಾರವಾಗಿ ಪ್ರಶ್ನಿಸಿದರು.
ಟಿಕೆಟ್ ತಪ್ಪಿಸಿದ್ದು, ಬಿ.ಎಲ್ ಸಂತೋಷ ಎಂಬ ಜಗದೀಶ್ ಶಟ್ಟರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಶೆಟ್ಟರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಬಿ.ಎಲ್ ಸಂತೋಷ ಕುರಿತು ಈ ರೀತಿಯಾಗಿ ಹೇಳಿಕೆ ನೀಡುವುದು ಸರಿಯಲ್ಲ. ಅಲ್ಲದೇ, ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಉತ್ತರಿಸಿದರು.