ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ದೇಶವೇ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಟಾಪನೆ ಸಂಭ್ರಮದಲ್ಲಿ ಮಿಂದೆದ್ದಿದೆ. ಎಲ್ಲೆಡೆ ಜೈ ಶ್ರೀರಾಮ್ ಘೋಷಣೆಗಳು ಮೊಳಗಿವೆ.
ಇದೀಗ ಭಾರತದ ಮೇಲೆ ವಿಶೇಷ ಒಲವು ಹೊಂದಿರುವ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್, ಸಾಮಾಜಿಕ ಜಾಲತಾಣದಲ್ಲಿ ಈ ಶುಭ ಕಾರ್ಯಕ್ರಮಕ್ಕೆ ವಿಶೇಷ ಸಂದೇಶ ರವಾನಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಭಾರತೀಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಆಸ್ಟ್ರೇಲಿಯಾದ ಸ್ಪೋಟಕ ಎಡಗೈ ಬ್ಯಾಟರ್ ಡೇವಿಡ್ ವಾರ್ನರ್, ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ “ಜೈ ಶ್ರೀರಾಮ್ ಇಂಡಿಯಾ” ಎಂದು ಬರೆದು ಶ್ರೀರಾಮಚಂದ್ರನ ಪೋಟೋವನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಡೇವಿಡ್ ವಾರ್ನರ್ ಮೂಲತಃ ಆಸ್ಟ್ರೇಲಿಯಾ ಕ್ರಿಕೆಟಿಗನಾಗಿದ್ದರೂ ಸಹಾ, ಭಾರತದ ಕಲೆ, ಸಂಸ್ಕೃತಿಯನ್ನು ಗೌರವಿಸುತ್ತಲೇ ಬಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಕ್ರಿಯ ಸದಸ್ಯರಾಗಿರುವ ಡೇವಿಡ್ ವಾರ್ನರ್, ದೀಪಾವಳಿ ಸೇರಿದಂತೆ ಭಾರತೀಯರ ಹಬ್ಬ ಹರಿದಿನಗಳಿಗೆ ಶುಭಕೋರುವ ಮೂಲಕ ಒಂದು ರೀತಿ ಭಾರತದ ದತ್ತುಪುತ್ರ ಎಂದೇ ಸೋಷಿಯಲ್ ಮೀಡಿಯಾದಲ್ಲಿ ಕರೆಸಿಕೊಳ್ಳುತ್ತಿದ್ದಾರೆ.