ಹೊಸದಿಗಂತ ವರದಿ ಗದಗ:
ನಕಲಿ ಔಷಧಗಳ ಮಾಫಿಯಾ ದೊಡ್ಡ ಮಟ್ಟದಲ್ಲಿ ವ್ಯಾಪಿಸಿರುವ ಆತಂಕಕಾರಿ ಜಾಲವಾಗಿದ್ದು, ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ನಕಲಿ ಔಷಧಗಳ ದಂಧೆ ಜನರ ಆರೋಗ್ಯದೊಂದಿಗೆ ನೇರವಾಗಿ ಸಂಬಂಧಿಸಿದ ಅತ್ಯಂತ ಗಂಭೀರ ವಿಚಾರವಾಗಿದೆ. ಇಂತಹ ಔಷಧಗಳಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ನಕಲಿ ಔಷಧಗಳ ಜಾಲವನ್ನು ಪತ್ತೆಹಚ್ಚಲಾಗಿದ್ದು, ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ತನಿಖೆ ಮುಂದುವರಿದಿದ್ದು, ಪ್ರಕರಣದ ಹಿಂದೆ ದೊಡ್ಡ ಮಟ್ಟದ ಜಾಲವಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣ ಕೇವಲ ಕರ್ನಾಟಕ ಅಥವಾ ರಾಮನಗರಕ್ಕೆ ಸೀಮಿತವಾಗಿಲ್ಲ. ಬೇರೆ ರಾಜ್ಯಗಳಿಂದ ಔಷಧಗಳನ್ನು ತರಿಸುವುದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಂಪನಿಗಳ ಹೆಸರನ್ನು ಬಳಸುವುದು ಹಾಗೂ ದೊಡ್ಡ ಆಸ್ಪತ್ರೆಗಳಿಗೆ ಔಷಧಗಳನ್ನು ಸರಬರಾಜು ಮಾಡುವಂತಹ ವ್ಯವಸ್ಥಿತ ಜಾಲದ ಕುರಿತು ತನಿಖೆ ನಡೆಯುತ್ತಿದೆ ಎಂದರು.
ಎಸ್ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಕರಣದ ಎಲ್ಲ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಲಾಗುವುದು ಎಂದು ಹೇಳಿದರು.
ನಕಲಿ ಔಷಧಗಳ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ, ಅವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡಕ್ಕೂ ಮಣಿಯದೆ ಅಕ್ರಮ ಜಾಲವನ್ನು ಮಟ್ಟಹಾಕಲಾಗುವುದು ಎಂದು ಖಾದರ್ ಸ್ಪಷ್ಟಪಡಿಸಿದರು.
ಒಂದು ಕಡೆ ಇಂತಹ ಅಕ್ರಮ ಔಷಧಗಳ ತಯಾರಿಕೆ ಅಥವಾ ಸರಬರಾಜಿಗೆ ನಿಷೇಧ ಹೇರಿದರೆ, ಮತ್ತೊಂದು ಕಡೆ ಅದೇ ದಂಧೆ ಹೊಸ ರೂಪದಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಹೀಗಾಗಿ ನಕಲಿ ಔಷಧಗಳ ಮಾಫಿಯಾಕ್ಕೆ ಶಾಶ್ವತವಾಗಿ ಕಡಿವಾಣ ಹಾಕಲು ಕೇಂದ್ರ ಮಟ್ಟದಲ್ಲೇ ಪರಿಣಾಮಕಾರಿ ಹಾಗೂ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು.



